ಬೆಳಗಾವಿ ಸುವರ್ಣಸೌಧ,ಡಿ.04: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್ಸೆಟ್ಗಳಿಗೆ ದಿನನಿತ್ಯ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ವಿಧಾನಪರಿಷತ್ನಲ್ಲಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಇಂಧನ ಸಚಿವರ ಪರವಾಗಿ ಅವರು ಉತ್ತರಿಸಿದರು.
ರೈತರ ಪಂಪ್ಸೆಟ್ಗಳಿಗೆ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿನ ಬೇಡಿಕೆಗಳ ಹಿನ್ನೆಲೆಯಲ್ಲಿ ಭತ್ತ ಮತ್ತು ಕಬ್ಬು ಬೆಳೆಗಳ ಕಟಾವು ಪೂರ್ವ ಅವಧಿಯಲ್ಲಿ 7 ಗಂಟೆಗಳಿಗೂ ಹೆಚ್ಚಿನ ಅವಧಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಅವಶ್ಯಕತೆಗೆ ತಕ್ಕಂತೆ ಹಗಲಿನಲ್ಲಿ 4 ಗಂಟೆಗಳು ಹಾಗೂ ರಾತ್ರಿ ವೇಳೆ 3 ಗಂಟೆಗಳು ಸೇರಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ.
ಈ ವರ್ಷ ಬರಗಾಲವಾಗಿರುವುದರಿಂದ ಕೃಷಿ ಪಂಪ್ಸೆಟ್ಗಳ ವಿದ್ಯುತ್ ಬಳಕೆ ಪ್ರಮಾಣ ದ್ವಿಗುಣವಾಗಿರುವುದರಿಂದ,ಲಭ್ಯ ಸಂಪನ್ಮೂಲಗಳಿಂದ ವಿದ್ಯುತ್ ಪಡೆದು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೆಲವು ಸಮಯಗಳಲ್ಲಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಲಭ್ಯತೆ/ಉತ್ಪಾದನೆ ಕುಂಠಿತಗೊಂಡು ಸೀಮಿತ ಪ್ರಮಾಣದಲ್ಲಿ ವಿದ್ಯುತ್ ಸರಬರಾಜು ಮಾಡಿರುವುದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.