ಕಲಬುರಗಿ; ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಅವರು ಶನಿವಾರ ಕಲಬುರಗಿ ನಗರಕ್ಕೆ ಹತ್ತಿಕೊಂಡಿರುವ ಜಾಫರಾಬಾದ ಬಳಿ ಸಬಾರ್ಡ್ ಸಹಾಯದೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಂಪೂರ್ಣ ಮಾರುಕಟ್ಟೆ ರೇಷ್ಮೆ ಬೆಳೆಗಾರರ ಸ್ನೇಹಿಯಾಗಿ ನಿರ್ಮಿಸಬೇಕೆಂದು ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
4 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಈಗಾಗಲೆ ನಮ್ಮ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು ಎಂದು ಗುತ್ತಿಗೆದಾರರಿಗೂ ಸೂಚಿಸಿದ ಕನೀಜ್ ಫಾತಿಮಾ ಅವರು, ರೇಷ್ಮೆ ಮಾರುಕಟ್ಟೆ ಇಲ್ಲಿ ಸ್ಥಾಪನೆಯಾದಲ್ಲಿ ಸ್ಥಳೀಯ ರೈತರು ದೂರದ ರಾಮನಗರಕ್ಕೆ ಹೋಗಿ ರೇಷ್ಮೆ ಮಾರಾಟ ಮಾಡುವುದು ತಪ್ಪಲಿದೆ ಎಂದರು.
ಈ ಸಂದರ್ಭದಲ್ಲಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ನಾಗಪ್ಪ ಬಿರಾದಾರ, ಸಹಾಯಕ ನಿರ್ದೇಶಕ ನಯೀಮ್ ಚೌಧರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಸುಭಾಷ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.