ಕಲಬುರಗಿ: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪ್ರಚಾರಾರ್ಥ ಪಟ್ಟಣದ ಅಂಬೇಡ್ಕರ್ ಭವನದ ಹಿಂಭಾಗದಲ್ಲಿ ಮೇ 1ರಂದು (ಬುಧವಾರ) ಸಂಜೆ 5 ಗಂಟೆಗೆ ಹಮ್ಮಿಕೊಂಡಿರುವ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಮತ್ತಿತರ ಮುಖಂಡರು ಆಗಮಿಸಲಿದ್ದಾರೆ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯಸಿಂಗ್ ತಿಳಿಸಿದರು.
ರಾಜ್ಯದ ಜನತೆಗೆ ತೆರಿಗೆ ಹಣ ಕೊಡದೆ, ಬೆಳೆ ಹರಿಹಾರ ನೀಡಿದ ಕೇಂದ್ರದ ಬಿಜೆಪಿ ಸರ್ಕಾರ ರೈತರು, ಬಡವರ ಜೀವನದ ಜೊತೆ ಚೆಲ್ಲಾಟ ನಡೆಸುತ್ತಿದ್ದು, ಪ್ರಧಾನಿ ಮೋದಿ ಅವರು ತಮ್ಮ 10 ವರ್ಷದ ಆಡಳಿತಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಹೀಗಾಗಿ ಜನತೆಯ ವಿಶ್ವಾಸ ಕಳೆದುಕೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಮೋದಿ ಹವಾ ನಡೆಯುವುದಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೆಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸೇರಿದಂತೆ ಜೇವರ್ಗಿ ಕ್ಷೇತ್ರದಲ್ಲೂ ಬಿಜೆಪಿಗೆ ಲೀಡ್ ಬಂದಿತ್ತು. ಆದರೆ ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಈ ಬಾರಿ ಕನಿಷ್ಠ 10 ಸಾವಿರ ಲೀಡ್ ದೊರೆಯಲಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಜೊತೆಗೆ ಪಕ್ಷದ ಈ ಬಾರಿಯ ಪ್ರಣಾಳಿಕೆಗಳು ಜನರಿಗೆ ಭರವಸೆ ಮೂಡಿಸಿವೆ. ಹೀಗಾಗಿ ಕನಿಷ್ಠ 15-ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ನೀಲಕಂಠರಾವ ಮೂಲಗೆ, ಶರಣು ಭೂಸನೂರ, ಪರಮೇಶ್ವರ, ಶ್ಯಾಮ ನಾಟೀಕಾರ, ನೀಲಕಂಠರಾಯ ಅವಂಟಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.