ಕಲಬುರಗಿ :ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣೀ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ 3 ರೂ ಹಾಗೂ ಡೀಸೆಲ್ ಮೇಲೆ 3.50 ರೂ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ.
ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಜೆಡಿಎಸ್ ಪಕ್ಷವಯ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಜೆಡಿಎಸ್ ಪಕ್ಷ ಬೀದಿಗಿಳಿದು ಹೋರಾಡಲಿದೆ ಎಂದರು.