ಕಲಬುರಗಿ: ಕರೋನಾ ವೈರಸ್ನಿಂದ ಮೃತಪಟ್ಟ ವ್ಯಕ್ತಿ ಸೇರಿದ ಕಲಬುರಗಿಯ ವಾರ್ಡ್ ನಂ 30ನ್ನು ಆಡಳಿತ/ ಕಂಟೆನ್ಮೆಂಟ್ ಜೋನ್ ಎಂದು ಘೋಷಿಸಿದ್ದು, 5 ಕಿಲೋ ಮೀಟರ್ ವ್ಯಾಪ್ತಿಯ ಬಫರ್ ಜೋನ್ನಲ್ಲಿ ಅಗತ್ಯ ಚೆಕ್ ಪೋಸ್ಟ್ ತೆರೆದು ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಶರತ್ ಬಿ. ಅವರು ಸೂಚಿಸಿದ್ದಾರೆ.
ನಗರದ ವಾರ್ತಾ ಭವನದಲ್ಲಿ ಇಂದು ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು. ಮೃತಪಟ್ಟ ವ್ಯಕ್ತಿಯನ್ನು ಭೇಟಿ ಮಾಡಿದ ಸಂಬಂಧಿಕರು ಹಾಗೂ ಮತ್ತಿತರ ಮಾಹಿತಿ ಸಂಗ್ರಹಿಸಿ ಪಟ್ಟಿ ಮಾಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ, ಬಫರ್ ಜೋನ್ನಲ್ಲಿ ೯ ಚೆಕ್ ಪೋಸ್ಟ್ ತೆರೆದಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ೪ ರಿಂದ ೧೪ ದಿನಗಳವರೆಗೆ ಶಂಕಿತರ ಬಗ್ಗೆ ನಿಗಾವಹಿಸಲಾಗುತ್ತಿದೆ. ಕಂಟೇನ್ಮೆಂಟ್ ಜೋನ್ ನಲ್ಲಿ ಜನರಿಗೆ ಅರಿವು ಮೂಡಿಸಬೇಕು ಹಾಗೂ ಹೊರಗಿನಿಂದ ಬರುವವರಿಗೂ ಇಲ್ಲಿ ನಿಗಾವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಶಾಲಾ/ ಕಾಲೇಜು ವಿದ್ಯಾರ್ಥಿಗ ಬಗ್ಗೆ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಲಾ/ಕಾಲೇಜುಗಳಿಗೆ (ಪರೀಕ್ಷೆ ನಡೆಯುವುದನ್ನು ಹೊರತುಪಡಿಸಿ) ಒಂದು ವಾರ ರಜೆ ನೀಡುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಎ. ಜಬ್ಬಾರ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.