ಕಲಬುರಗಿ: ದಶಕಗಳ ಅನೇಕ ಹೋರಾಟದ ಪರಿಣಾಮ ತುಂಬಾ ಕಷ್ಟಪಟ್ಟು ೩೭೧ಜೆ ಕಾಯ್ದೆ ತಂದು ಉದ್ಯೋಗ ಮತ್ತು ಶಿಕ್ಷಣದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕು ಸ್ಥಳೀಯರಿಗೆ ಉದ್ಯೋಗದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇದೇ ಜೂನ್ ೨೨ ರಿಂದ ೨೪ರ ವರೆಗೆ ಲೋಕೋಪಯೋಗಿ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಸ್ಪಾಧಾತ್ಮಕ ಪರೀಕ್ಷೆ ಆರಂಭವಾಗಿದ್ದು, ಇಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ಥಳೀಯ ವೃಂದ ಮತ್ತು ರಾಜ್ಯವಾಪಿ ವೃಂದದಲ್ಲಿ ಕಡ್ಡಾಯವಾಗಿ ನೇಮಕಾತಿ ಪ್ರಾಧಿಕಾರಗಳು ಶೇಕಡಾವಾರು ಮೀಸಲಾತಿ ನೀಡಬೇಕಾಗುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಠಪಡಿಸಿದರು.