ಸುರಪುರ: ರಾಜ್ಯದಲ್ಲಿ ನಿಲ್ಲಿಸಲಾಗಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ವಿವಿಧ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಆಲ್ದಾಳ ಬೋನಾಳ ಬಾಚಿಮಟ್ಟಿ ಮತ್ತಿತರೆ ಕಡೆಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿ ಕೊರೊನಾ ಅಲೆ ವ್ಯಾಪಕವಾಗಿ ಹರಡುತ್ತಿದೆ,ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರು ಕೆಲಸವಿಲ್ಲದೆ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ನಿಲ್ಲಿಸುವ ಮೂಲಕ ಜನರ ಬದುಕಿಗೆ ಬರೆ ಎಳೆದಂತಾಗಿದೆ. ಆದ್ದರಿಂದ ಕೂಡಲೇ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಜನರಿಗೆ ಉದ್ಯೋಗ ನೀಡಬೇಕು.
ಶಾಸಕ ಡಾ. ಅಜಯ್ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
ಈಗಾಗಲೇ ಅನೇಕ ಕಾರ್ಮಿಕರು ದುಡಿದು ಕೂಲಿ ಹಣ ಬರದೆ ಜೀವನ ನಡೆಸಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದಾರೆ.ಆದ್ದರಿಂದ ಎಲ್ಲಾ ಕೂಲಿಕಾರರ ಬಾಕಿ ಹಣ ಬಿಡುಗಡೆ ಮಾಡಬೇಕು.ಉದ್ಯೋಗ ಖಾತ್ರಿ ಆರಂಭಿಸದಿದ್ದಲ್ಲಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೂ ತಿಂಗಳಿಗೆ ೧೦ ಸಾವಿರ ರೂಪಾಯಿಗಳ ಪರಿಹಾರ ಧನವನ್ನು ನೀಡಬೇಕೆಂದು ಒತ್ತಾಯಿಸಿದರು.
ಒಂದು ವೇಳೆ ಈ ನಮ್ಮ ಮನವಿಗೆ ಸರಕಾರ ಕೂಡಲೇ ಸ್ಪಂಧಿಸದಿದ್ದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸಲಿದೆ ಎಂದು ಎಚ್ಚರಿಸಿದರು.ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅಯ್ಯಪ್ಪ ರಾಜು ಬೋನಾಳ ಬಸವರಾಜ ಸೇರಿದಂತೆ ಅನೇಕ ಜನ ಕೂಲಿಕಾರರು ಭಾಗವಹಿಸಿದ್ದರು.