ರಸಗೊಬ್ಬರ ಬೆಲೆ ಇಳಿಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ

0
35

ಕಲಬುರಗಿ: ರಸಗೊಬ್ಬರ ಬೆಲೆ ಏರಿಸಿರುವ ಕೇಂದ್ರದ ಕ್ರಮವನ್ನು ವಿರೋಧಿಸಿರುವ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಈ ಕೂಡಲೇ ರಸಗೊಬ್ಬರ ಬೆಲೆ ಇಳಿಸುವಂತೆ ಆಗ್ರಹಿಸಿದ್ದಾರೆ.

ಈ‌ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಕೃಷಿ ಸಚಿವರಾದ ಬಿ.ಸಿ.ಪಾಟೀಲ್‌ಅವರಿಗೆ ಪತ್ರ ಬರೆದಿರುವ ಶಾಸಕರು ಕಳೆದ ವರ್ಷ ನೆರೆ ಪ್ರವಾಹದಿಂದ ರಾಜ್ಯದ ರೈತರು ತೀವ್ರ ನಷ್ಟ ಅನುಭವಿಸಿದ್ದರು. ಅಲ್ಲದೇ, ಕೊರೋನಾ ಲಾಕ್ ಡೌನ್ ನಿಂದಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಮಾರುಕಟ್ಟೆಯೂ ಲಭಿಸಿರಲಿಲ್ಲ ಜೊತೆಗೆ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದ್ದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸಿದ್ದರು.

Contact Your\'s Advertisement; 9902492681

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಂಪನಿಗಳು ರಸಗೊಬ್ಬರ ದರ ಏರಿಕೆ ಮಾಡಿದ್ದರೂ ಕೂಡಾ ಹಳೆ ದರದಲ್ಲಿಯೇ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ತನ್ನ ಮಾತು ತಪ್ಪಿದೆ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಸಗೊಬ್ಬರ ಬೆಲೆಯಲ್ಲಿ ಸ್ಥಿರತೆ ಸಾಧಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದಗೌಡ ಅವರು ಹೇಳಿದ್ದರು. ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಎಲ್ಲಾ ರಸಗೊಬ್ಬರ ಗಳ ಬೆಲೆ ಶೇ 42 ರಿಂದ ಶೇ 58 ಗೆ ಏರಿಕೆಯಾಗಿದೆ.

ನೆರೆ- ಬರ ಹಾಗೂ ರೋಗಗಳಿಂದ ಈಗಾಗಲೇ ಕೃಷಿ ಎಂಬುದು ನೀರ ಮೇಲಿನ ಗುಳ್ಳೆಯಾದಂತಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ‌ಏರಿಸಿದರಿಂದ ರೈತರು ಕೃಷಿಯಿಂದ ವಿಮುಖರಾಗುವ ಸಾಧ್ಯತೆಯಿದೆ ಎಂದು ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕೊರೋನ ಸಾಂಕ್ರಾಮಿಕದ ಈ‌ ವಿಷಮ ಪರಿಸ್ಥಿತಿ ಯಲ್ಲಿ ರೈತರು ತುಂಬಾ ಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ಈ ಕೂಡಲೇ ರಸಗೊಬ್ಬರ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಅವರು ಮಾನ್ಯ ಸಿಎಂ ಹಾಗೂ ಮಾನ್ಯ ಕೃಷಿ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here