ಕಲಬುರಗಿ: ಶಾಂತಿ ಕದಡುವುದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯೂ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಸಂದೀಪ ಭರಣಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರದಲ್ಲಿ ಕರ್ನಾಟಕ ಸರಕಾರ ಕೂಡಲೇ ಕ್ರಮ ಜರುಗಿಸಬೇಕು.ಮಹಾರಾಷ್ಟ್ರ ಸರಕಾರ ಭಾರತದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದು, ಪ್ರಧಾನಿ ಬಳಿ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರಕಾರಕ್ಕೆ ಲಗಾಮು ಹಾಕುವಂತೆ ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಡಿಸೆಂಬರ್ 3 ರಂದು ಮಹಾರಾಷ್ಟ್ರದ ಇಬ್ಬರು ಗಡಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜೆ ದೇಸಾಯಿ ಬೆಳಗಾವಿಯಲ್ಲಿ ಸಭೆ ನಡೆಸುವುದಾಗಿ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಈ ವಿಚಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.
ಬೆಳಗಾವಿ ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರಕಾರವೇ ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದೆ.ಕೋರ್ಟಿನ ತೀರ್ಪು ಬರುವವರೆಗೂ ಕಾಯಬೇಕಾದ ಮಹಾರಾಷ್ಟ್ರ ಸರ್ಕಾರ ಬೆಳಗಾವಿಯಲ್ಲಿ ಅಲ್ಲದೆ ಅಲ್ಲಿಯ ಕೆಲ ಶಿವಸೇನೆ ಪುಂಡರು ನಮ್ಮ ರಾಜ್ಯದ ವಾಹನಗಳಿಗೆ ಕಪ್ಪು ಮಸಿ ಬಳಿದು ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.