ಸುರಪುರ:ತಾಲೂಕು ಕಾನೂನು ಸೇವಾ ಸಮಿತಿ,ಜಿಲ್ಲಾಡಳಿತ,ತಾಲೂಕು ಆಡಳಿತ,ತಾಲೂಕು ಪಂಚಾಯಿತಿ ಹಾಗು ಕಾರ್ಮಿಕ ಇಲಾಖೆ,ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಚೇರಿ,ಸಾರ್ವಜನಿಕ ಶಿಕ್ಷಣ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ,ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.
ನಗರದ ದರಬಾರ ಶಾಲಾ ಆವರಣದಲ್ಲಿ ಜಾಥಾಕೆ ಸುರಪುರ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಮಾರುತಿ ಕೆ,ಮತ್ತೋರ್ವ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ನಂತರ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಬಹಿರಂಗ ಸಮಾವೇಶ ನಡೆಸಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಮಾರುತಿ ಕೆ ಅವರು ಮಾತನಾಡಿ,ಬಾಲ ಕಾರ್ಮಿಕ ಪದ್ಧತಿ ಎನ್ನುವುದು ಒಂದು ಅನಿಷ್ಟ ಪದ್ಧತಿಯಾಗಿದೆ.ಯಾರೆ ಆಗಲಿ 6 ರಿಂದ 14 ವರ್ಷದ ವರೆಗಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಮತ್ತು ಕೆಲಸಕ್ಕೆ ಸೇರಿಸುವುದು ಅಪರಾಧವಾಗಿದ್ದು ಕಾನೂನಿ ಅಡಿಯಲ್ಲಿ ಇದೆಕ್ಕೆ ಶಿಕ್ಷೆ ಇದೆ.ಅಲ್ಲದೆ ಒಂದು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದ್ದು,ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅಧ್ಯಕ್ಷತೆ ವಹಿಸಿದ್ದರು,ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರಿ,ಪಿ.ಎಸ್.ಐ ಕೃಷ್ಣಾ ಸುಬೇದಾರ,ಯಾದಗಿರಿಯ ಡಾನ್ಬಾಸ್ಕೋ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಕೆ.ಜೆ ಜೋಸಫ್,ಬಸವಪ್ರಭು ವಿದ್ಯಾವರ್ಧಕ ಸಂಸ್ಥೆ ಅಧ್ಯಕ್ಷ ಪ್ರಕಾಶ ಅಂಗಡಿ ಹಾಗೂ ಸುರಪುರ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಚೇರಿ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ,ನ್ಯಾಯಾಂಗ ಇಲಾಖೆಯ ಭೀಮರಾಯ ಬನಸೊಡೆ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.