ಕಲಬುರಗಿ ಜಿಲ್ಲೆಗೆ ತುರ್ತು ಕುಡಿಯುವ ನೀರು ನಿರ್ವಹಣೆಗಾಗಿ 100 ಲಕ್ಷ ರೂ. ಬಿಡುಗಡೆ

0
12

ಕಲಬುರಗಿ; ಜಿಲ್ಲೆಯಲ್ಲಿ ಕಳೆದ ವಾರದಿಂದ ಮಳೆ ಆಗುತ್ತಿದ್ದು, ಕುಡಿಯುವ ನೀರು ಸರಬರಾಜಿನಲ್ಲಿ ಆಗಿದ್ದ ಸಮಸ್ಯೆಗಳು ಸುಧಾರಣೆಯಾಗುತ್ತಿದೆ. ಆದಾಗ್ಯೂ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಆಗಿರುವ ತೊಂದರೆಯನ್ನು ಎದುರಿಸಲು 100 ಲಕ್ಷ ರೂ.ಅನುದಾನವನ್ನು ತುರ್ತು ನಿರ್ವಹಣೆಗಾಗಿ ಮಂಜೂರು ಮಾಡಲಾಗಿದೆ ಹಾಗೂ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ‌ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕುಗಳ ತಲಾ ಒಂದೊಂದು ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮುಂಬರುವ ವಾರಗಳಲ್ಲಿ ಕಡಿಮೆ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಮೌಲ್ಯಮಾಪನ ಮಾಡಲಾಗಿದ್ದು, ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ  130 ಕಾಮಗಾರಿಗಳಿಗೆ ಸಂಬಂಧಿಸಿದಂತೆ ರೂ 260 ಲಕ್ಷಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Contact Your\'s Advertisement; 9902492681

ಚರಂಡಿ ನೀರು ಅಥವಾ ಮಳೆನೀರು ಸೇರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ 1828 ಕೊಳವೆಬಾವಿಗಳು ಹಾಗೂ ಕೈಪಂಪುಗಳು ಮಾಲಿನ್ಯಕ್ಕೆ ಗುರಿಯಾಗಿವೆ. ಇಂತಹ ಕೊಳವೆ ಬಾವಿಗಳನ್ನು ಮಾಲಿನ್ಯದಿಂದ ರಕ್ಷಿಸುವ ಸಲುವಾಗಿ ಕೊಳವೆಬಾವಿ ಸುತ್ತಲೂ ರಕ್ಷಣಾತ್ಮಕ ಕಾಂಕ್ರೀಟ್ ರಿಂಗ್ ಅಳವಡಿಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ 135.20 ಲಕ್ಷ ರೂ. ವೆಚ್ಚವಾಗಲಿದೆ.

ಗ್ರಾಮೀಣ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಖಾಸಗಿಯಾಗಿ ಬಾಡಿಗೆಗೆ ಪಡೆಯಾಗಿರುವ ಕೊಳವೆಬಾವಿ ಹಾಗೂ ಟ್ಯಾಂಕರ್‌ಗಳ ಬಾಡಿಗೆ ಶುಲ್ಕದ ಬಿಲ್‌ಗಳನ್ನು ಪಾವತಿಸಲು ಗ್ರಾಮಪಂಚಾಯ್ತಿಗಳಿಗೆ ಅನುದಾನದ ಕೊರತೆಯಿದ್ದು,  ಈ ವೆಚ್ಚವನ್ನು ಭರಿಸಲು 20 ಲಕ್ಷ ರೂ. ಮಂಜೂರು ಮಾಡಲಾಗುವುದು. ಮೇ-ಜೂನ್‌ ತಿಂಗಳುಗಳಲ್ಲಿ 7 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಜಿಲ್ಲೆಯಲ್ಲಿ 200 ಶುದ್ಧ ನೀರಿನ ಘಟಕಗಳು ದುರಸ್ತಿಗೆ ಒಳಗಾಗಿದ್ದು, ಇವುಗಳನ್ನು ಸರಿಪಡಿಸಿ ನೀರು ಸರಬರಾಜು ಮಾಡಲು ಕಾರ್ಯಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ಅಂತರ್ಜಲ ಕಲುಷಿತಗೊಳ್ಳದಂತೆ ಸ್ವಚ್ಛತಾ ಅಭಿಯಾನ ಕೈಗೊಂಡು ಸುತ್ತಮುತ್ತಲ ಪ್ರದೇಶಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತಿದೆ.

ಜಿಇ/ಕಾಲರಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದಿನ ಐದು ವರ್ಷಗಳ ಕಣ್ಗಾವಲು ಮಾಹಿತಿಯನ್ನು ಆಧರಿಸಿ 49 ಗ್ರಾಮಗಳನ್ನು ಗುರುತಿಸಿಲಾಗಿದೆ.  ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ರೀತಿಯ ಮಾಲಿನ್ಯವನ್ನು ತಪ್ಪಿಸಲು ನೀರಿನ ಪರೀಕ್ಷೆ, ಸಂಭವನೀಯ ಜಿಇ ಪ್ರಕರಣಗಳನ್ನು ಗುರುತಿಸಲು ಆಶಾ ಕಾರ್ಯಕರ್ತರ ಮೂಲಕ ಸಮೀಕ್ಷೆ, ನೀರಿನ ಜಾಲದ ವಿವರವಾದ ಲೆಕ್ಕಪರಿಶೋಧನೆಗಾಗಿ ಅಭಿಯಾನವನ್ನು ತೀವ್ರಗೊಳಿಸಿದ್ದೇವೆ. ಗ್ರಾಮಪಂಚಾಯತಿಗಳು ಮಾರ್ಗಸೂಚಿಯನ್ವಯ ನೀರಿನ ಕ್ಲೋರಿನೇಷನ್ ಮಾಡುತ್ತಿದ್ದಾರೆ, ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ತರಬೇತಿ ನೀಡಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.

ನೀರು ಸರಬರಾಜು ಹಾಗೂ ನೀರಿನ ಗುಣಮಟ್ಟಕ್ಕೆ ಸಂಬಂಧಿಸಿದ ದೂರುಗಳನ್ನು ಪರಿಹರಿಸಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೂರು ಪರಿಹಾರ ಕೋಶವನ್ನು ಸ್ಥಾಪಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here