ಕಲಬುರಗಿ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ದಿ ಇಲಾಖೆ ಹಾಗೂ ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಮಂಡಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಕಲಬುರಗಿ ಮಹಾನಗರಕ್ಕೆ 24 ಗಂಟೆ ನಿರಂತರ ಕುಡಿಯುವ ನೀರು ಒದಗಿಸುವ ಯೋಜನೆ ಕುಂಟುತ್ತಾ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೆ 15 ದಿನದಲ್ಲಿ ಕಾರ್ಮಿಕರ ಸಂಖ್ಯೆ ದ್ವಿಗುಣಗೊಳಿಸಿ ಕಾಮಗಾರಿ ಮಿಷನ್ ಮೋಡ್ ನಲ್ಲಿ ಪೂರ್ಣಗೊಳಿಸಬೇಕು. 24×7 ಕುಡಿಯುವ ನೀರಿನ ಕಾಮಗಾರಿಯನ್ನು ನಿಧಾನಗತಿ ಸಹಿಸುವುದಿಲ್ಲ. ಎಲ್.& ಟಿ ಕಂಪನಿ ಇದನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಕಾರ್ಮಿಕ ಸಂಖ್ಯೆ ಹೆಚ್ಚಿಸಬೇಕು. ಇನ್ನು ಈ ಕಾಮಗಾರಿ ಕುರಿತು ಪ್ರತಿ ವಾರ ಖುದ್ದಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಅವರಿಗೆ ಸಚಿವರು ಸೂಚಿಸಿದರು.
ಕಲಬುರಗಿ ಉತ್ತರ ಹಾಗೂ ದಕ್ಷಿಣ ವಿಧಾನಸಭೆ ವ್ಯಾಪ್ತಿಯ ವಾರ್ಡುಗಳಲ್ಲಿ ವಾರಕ್ಕೊಮ್ಮೆ ರಾಡಿ ಮಿಶ್ರಿತ ಹಾಗೂ ಹುಳುಗಳು ಇರುವ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರು ದೂರು ಸಲ್ಲಿಸುತ್ತಿದ್ದು ಈ ಕುರಿತು ಕಮೀಷನರ್ ಗಮನಕ್ಕೆ ತರಲಾಗಿದೆ ಎಂದು ಶಾಸಕರಾದ ಅಲ್ಲಮಪ್ರಭು ಪಾಟೀಲ ಹಾಗೂ ಕನೀಜ್ ಫಾತೀಮಾ ಸಭೆಯಲ್ಲಿ ಹೇಳಿದರು.
ಒಡೆದು ಸೋರುತ್ತಿರುವ ಪೈಪ್ ಲೈನ್ ಗಳ ಬದಲಾವಣೆಗೆ ತ್ವರಿತಗತಿ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಕಲುಷಿತ ನೀರು ಸರಬರಾಜು ಆಗುವುದನ್ನು ತಡೆಯಬಹುದು. ಹೊಸ ಪೈಪ್ ಲೈನ್ ಅಳವಡಿಕೆಗೆ ಯಾಕೆ ನಾಲ್ಕು ದಿನ ಬೇಕು ? ಅಗತ್ಯವಿರುವಷ್ಟು ಸಿಬ್ಬಂದಿಯನ್ನು ಕೂಡಲೇ ನೇಮಿಸಿಕೊಂಡು ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಪ್ರಿಯಾಂಕ್ ಖರ್ಗೆ ಸೂಚಿಸಿದರು.
‘ಸರ್ಕಾರದ ದ್ರಾಕ್ಷಿ, ಗೋಡಂಬಿ ತಿನ್ನಲು ಬಂದಿದ್ದೀರಾ?’
ಕರ್ನಾಟಕ ನಗರ ಕುಡಿಯುವ ನೀರು ಯೋಜನೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕಾಂತರಾಜ್ ಹಾಗೂ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿ ಸಂಜಯ್ ಅವರು ಪೈಪ್ ಲೈನ್ ಗಾಗಿ ನೆಲ ಅಗೆದು ಹಾಗೆಯೇ ಬಿಟ್ಟಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ಟೆಕ್ಸ್ ಮೊ ಕಂಪನಿಯ ಎಚ್ ಡಿಪಿ ಪೈಪ್ ನ ಸಾಮರ್ಥ್ಯದ ಬಗ್ಗೆ ಮೈಸೂರಿನ ಸಿಪೆಟ್ ಸಂಸ್ಥೆಯು ವರದಿ ನೀಡಿದ್ದು, ಉತ್ತಮ ಗುಣಮಟ್ಟ ಹೊಂದಿಲ್ಲ ಎಂದಿದೆ. ಆದರೂ ಅದೇ ಕಂಪನಿಯ ಪೈಪ್ ಅಳವಡಿಸಿದ್ದೇಕೆ ? ಈ ಕುರಿತಾದ ಸೆಪೆಟ್ ವರದಿಗಳು ನಿಮ್ಮ ಬಳಿ ಇವೆಯಾ? ಎಂದು ಪ್ರಶ್ನಿಸಿದರು.
ಆಗ ಸರಿಯಾದ ಉತ್ತರ ನೀಡಲು ಹಾಗೂ ದಾಖಲೆ ಒದಗಿಸಲು ವಿಫಲವಾದ ಅಧಿಕಾರಿಗಳ ವಿರುದ್ದ ಹರಿಹಾಯ್ದ ಖರ್ಗೆ, ಯೋಜನೆ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸುಮ್ಮನೇ ಸರ್ಕಾರಿ ದ್ರಾಕ್ಷಿ ಗೋಡಂಬಿ ತಿಂದು ಹೋಗಲು ಬಂದಿದ್ದೀರಾ ಎಂದು ಖಾರವಾಗಿ ಪ್ರಶ್ನಿಸಿದರು.
ಮುಂದುವರೆದು ಮಾತನಾಡಿದ ಅವರು ಎಲ್ಲಿ ಬೇಕೆಂದರಲ್ಲಿ ನೆಲವನ್ನು ಅಗೆದು ಅದನ್ನು ಮುಚ್ಚಿ ಮರಳಿ ಡಾಂಬರೀಕರಣ ಮಾಡಿಲ್ಲ. ಜನರಿಗೆ ತೊಂದರೆಯಾಗುತ್ತಿರುವುದು ನೀವೆಲ್ಲ ಗಮನಿಸಿಲ್ಲವೇ? ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂತರಾಜ, ಹೈಡ್ರೊ ಟೆಸ್ಟಿಂಗ್ ಮಾಡುತ್ತಿರುವುದರಿಂದ ಅಗೆದ ನೆಲ ಮುಚ್ಚಿಲ್ಲ ಎಂದರು.
ಆಗ ಮಧ್ಯೆ ಪ್ರವೇಶ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ ಮಾತನಾಡಿ 120 ಕಿ.ಮೀ. ಪೈಪ್ ಲೈನ್ ಅಳವಡಿಸಿದರೂ ಕೇವಲ 2 ಕಿ.ಮೀ. ಮಾತ್ರ ಹೈಡ್ರೊ ಟೆಸ್ಟಿಂಗ್ ಆಗಿದೆ ಎಂದರೆ ಹೇಗೆ? ಟೆಸ್ಟಿಂಗ್ ಆಗದೇ ಅಷ್ಟು ಉದ್ದದವರೆಗೆ ಪೈಪ್ ಹಾಕಲು ಅನುಮತಿ ಏಕೆ ಕೊಟ್ಟಿರಿ ? ಸಾರ್ವಜನಿಕರ ಸಮಸ್ಯೆ ನಿವಾರಿಸಲು ಎಲ್ & ಟಿ ಸ್ಪಂದನಾ ತಂಡ ರಚಿಸಬೇಕು. ಪ್ರಸ್ತುತ ಮಳೆಗಾಲ ಇರುವುದರಿಂದ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಬೇಕು. ಕಾಮಗಾರಿ ಪ್ರಗತಿ ಕುರಿತು ಸ್ಥಳೀಯ ಶಾಸಕರೊಂದಿಗೆ ಹಂಚಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
700 ಕಾರ್ಮಿಕರ ಬದಲಾಗಿ 300 ಕಾರ್ಮಿಕರಿಂದ ಕುಡಿಯುವ ನೀರು ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಕಾಮಗಾರಿ ಆಮೆ ಗತಿ ಸಾಗುತ್ತಿದೆ. ಕಾಮಗಾರಿಯು ನಿಧಾನಗತಿಗೆ ಕಾರಣ ಕೇಳಿ ಕೂಡಲೆ ಎಲ್ & ಟಿ ಕಂಪನಿಗೆ ನೋಟಿಸ್ ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಅವರಿಗೆ ಸೂಚಿಸಿದ ಸಚಿವ ಪ್ರಿಯಾಂಕ್ ಖರ್ಗೆ ಕಾಮಗಾರಿ ವೇಗ ಪಡೆದುಕೊಳ್ಳದಿದ್ದಲ್ಲಿ ಎಲ್ & ಟಿ ಕಂಪನಿಂದ ಗುತ್ತಿಗೆ ಹಿಂಪಡೆದು ಬೇರೆಯವರಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಖರ್ಗೆ, ಕಮೀಷನರ್ ಭುವನೇಶ ಪಾಟೀಲ ಕುರಿತು, ನೀವು ಕಮಿಷನರ್ ಇದ್ದೀರಾ? ಅಧಿಕಾರಿಗಳು ಯಾಕೆ ಕೆಲಸ ಮಾಡುತ್ತಿಲ್ಲ ಗೊತ್ತಿಲ್ಲ ಎಂದರೆ ಹೇಗೆ ? ನಿಮಗೆ ಸರ್ಕಾರ ಎಲ್ಲ ಸವಲತ್ತು ನೀಡಿದೆ. ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಯಾರು ಸರಿಯಾಗಿ ಕೆಲಸ ಮಾಡುವುದಿಲ್ಲ ಅಂತವರ ವಿರುದ್ದ ಕ್ರಮ ಕೈಗೊಳ್ಳಿ. ಕಷ್ಟಪಟ್ಟು ವಿಶ್ವಬ್ಯಾಂಕ್ ನಿಂದ ಸಾಲ ತಂದರೆ ಸಮರ್ಪಕ ಕುಡಿಯುವ ನೀರಿನ ಯೋಜನೆ ಜಾರಿ ಮಾಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು
ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವಾರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ಎಂ.ರಾಚಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಸಿಈಓ ಭಂವಾರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಚಪ್ಪ, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ್ ಪಾಟೀಲ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…