ಕಲಬುರಗಿ: ಸಂವಿಧಾನದ 371ನೇ ಜೇ ಕಲಂ ಅನುಷ್ಠಾನದ ಪ್ರಗತಿ ಪರಿಶೀಲನಾ ಸಂಪುಟ ಉಪಸಮಿತಿಗೆ ಕಲ್ಯಾಣ ಕರ್ನಾಟಕದ ಸಚಿವರಾದ ಪ್ರಿಯಾಂಕ್ ಖರ್ಗೆರವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿ ನೇಮಕ ಮಾಡಿರುವುದು ಸ್ವಾಗತಾರ್ಹವಾದ ಕ್ರಮವಾಗಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಲ್ಯಾಣದ ಜನಮಾನಸದ ವತಿಯಿಂದ ವಿಶೇಷ ಸ್ಥಾನಮಾನದ ಅನುಷ್ಠಾನದ ಪರಿಶೀಲನಾ ಸಂಪುಟ ಉಪ ಸಮಿತಿಗೆ ಕಲ್ಯಾಣ ಕರ್ನಾಟಕದ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಸರ್ಕಾರದ ಮುಂದೆ ಇಟ್ಟಿರುವ ಈ ಬೇಡಿಕೆಗೆ ಸ್ಪಂದನೆ ಸಿಕ್ಕಿರುವದು ಸಂತಸ ತಂದಿದೆ ಎಂದಿದ್ದಾರೆ.
ಪ್ರಿಯಾಂಕ್ ಖರ್ಗೆರವರು ಆಡಳಿತದಲಿರಲ್ಲಿ , ವಿರೋಧ ಪಕ್ಷದ ಸ್ಥಾನದಲ್ಲಿ ಇರಲಿ ಕಲ್ಯಾಣ ಕರ್ನಾಟಕದ 371ನೇ ಜೇ ಕಲಂ ಅಡಿ ನಮ್ಮ ಹಕ್ಕಿನ ನೇಮಕಾತಿಗಳ ಬಗ್ಗೆ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ವಿಷಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ, ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆರವರು 371 ಜೇ ಕಲಂ ಅನುಚ್ಛೇದ ಅನುಷ್ಠಾನದ ಸಂಪುಟ ಉಪಸಮಿತಿಗೆ ಅಧ್ಯಕ್ಷರಾಗಿ ನೇಮಕವಾಗಿರುವದು ವಿಶೇಷ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಬಲಬಂದಂತಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.