ಕಲಬುರಗಿ: ಸಚಿವ ಸ್ಥಾನದಿಂದ ಪವಂಚಿತರಾಗಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ ಜೇವರ್ಗಿ ಕ್ಷೇತ್ರದ ಶಾಸಕ ಡಾ ಅಜಯ ಸಿಂಗ್ ಶನಿವಾರ ನಗರದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಅಸಮಾಧಾನ ಬಹಿರಂಗವಾಗಿ ಸ್ಪೋಟಿಸಿದ್ದಾರೆ.
ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಅದರಲ್ಲೂ ಡಾ. ಅಜಯ ಸಿಂಗ್ ಅವರ ಮನೆಗೆ ಹತ್ತಿಕೊಂಡಂತೆ ನಡೆದಿರುವ ಗೃಹ ಜ್ಯೋತಿ ಯೋಜನೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಈಶ್ವರ ಖಂಡ್ರೆ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದು, ಮೂರನೇ ಬಾರಿಗೆ ಶಾಸಕರಾಗಿರುವ ಜೇವರ್ಗಿ ಕ್ಷೇತ್ರದ ಡಾ. ಅಜಯಸಿಂಗ್ ಮಾತ್ರ ಗೈರು ಹಾಜರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.