ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ

0
20

ಕಲಬುರಗಿ; ಅಪ್ರಾಪ್ತ ಮಕ್ಕಳ ಮೇಲೆ ಇಂದು ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪೋಷಕರು, ಶಿಕ್ಷಕರು, ಪೊಲೀಸ್ ಅಧಿಕಾರಿಗಳು ಹಾಗೂ ಇತರೆ ಮಕ್ಕಳ ಸಂಬಂಧಿತ ಇಲಾಖೆಯ ಅಧಿಕಾರಿಗಳ ಸಾಮೂಹಿಕ ಜವಾಬ್ದಾರಿಯಾಗಿದೆ. ಎಲ್ಲರು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಇದರ ನಿಯಂತ್ರಣಕ್ಕೆ ಮುನ್ನುಡಿ ಬರೆಯಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಹೇಳಿದರು.

ಮಂಗಳವಾರ ಕಲಬುರಗಿ ನಗರದ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹೆಚ್.ಕೆ.ಇ ಸಂಸ್ಥೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಮಿಷನ್ ಸುರಕ್ಷಾ” ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಭಾಗವಾಗಿ ಆಯೋಜಿಸಿದ ತರಬೇತಿದಾರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ ಬಳಿಕವೇ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತುತ್ತದೆ. ಈ ನಡುವೆಯೇ ಸಂತ್ರಸ್ತ ಬಾಲಕಿಯ ಪಾಲಕರು ಮತ್ತು ಅತ್ಯಾಚಾರವೆಸಗಿದ ಆರೋಪಿ ನಡುವೆ ರಾಜಿ ಸಂಧಾನ ಸಾಧ್ಯತೆ ಹೆಚ್ಚಿರುತ್ತದೆ. ಅತ್ಯಾಚಾರಗೊಳ್ಳಗಾದ ಬಾಲಕಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಹೇಳಿಕೆ ನೀಡದೆ ಇರುವುದರಿಂದ ಬಹಳಷ್ಟು ಪೋಕ್ಸೋ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುತ್ತಿಲ್ಲ. ಹೀಗಾಗಿ ಅತ್ಯಾಚಾರಗೊಳಗಾದ ಬಾಲಕಿ, ಪಾಲಕರು ಮತ್ತು ಪೊಲೀಸರು ಜವಾಬ್ದಾರಿಯುತವಾಗಿ ನ್ಯಾಯಾಲಯಕ್ಕೆ ಸಾಕ್ಷಾಧಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹ್ಮದ್ ಅನ್ವರ್ ಹುಸೇನ್ ಮೊಗಲಾನಿ ಅವರು ಮಾತನಾಡಿ, 7 ರಿಂದ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಬಾಲಕಿಯರು ಆಧುನಿಕ ಜೀವನ ಶೈಲಿಗೆ ಒಳಗಾಗಿ ಪ್ರೀತಿ-ಪ್ರೇಮದ ಬಲೆಗೆ ಬಿದ್ದು, ಅತ್ಯಾಚಾರಕ್ಕೊಳಗಾಗಿ ಯಾತನೆ ಅನುಭವಿಸುವಂತಾಗಿದೆ. ಇದನ್ನು ತಡೆಯಬೇಕಾದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿಶೇಷ ಸಮಿತಿ ರಚಿಸಿ ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ ಹಂತದಲ್ಲಿಯೇ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.

ಇನ್ನು ಶಾಲಾ ಮಕ್ಕಳ ಚಲನವಲನ ಮೇಲೆ ಶಿಕ್ಷಕರು ನಿಗಾ ವಹಿಸಬೇಕು. ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತು ಅವರಲ್ಲಿ ಅರಿವು ಮೂಡಿಸಬೇಕಾಗಿದೆ. ಪಾಲಕ-ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಸಾಲದು, ಅವರ ಶಾಲಾ ಅವಧಿ ಸೇರಿ ದೈನಂದಿನ ಚಟುವಟಿಕೆ ಮೇಲು ನಿಗಾವಹಿಸಬೇಕು. ಮಕ್ಕಳು ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂಬುದನ್ನು ಅರಿಯಬೇಕು ಎಂದ ಅವರು, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಜೊತೆಗೆ ಸಮಾಜದ ಸಹಕಾರವು ತುಂಬಾ ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು “ಮಿಷನ್ ಸುರಕ್ಷಾ” ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ವಿಶೇಷ ಕಾಳಜಿ ವಹಿಸಿ ಸಮಿತಿ ರಚಿಸಿ ತರಬೇತುದಾರರಿಗೆ ಅರಿವು, ಜಾಗೃತಿ ಹಾಗೂ ತರಬೇತಿ ನೀಡಲು ಈ ಕಾರ್ಯಕ್ರಮ ಸಂಘಟಿಸಲಾಗಿದೆ. ಅಭಿಯಾನದಲ್ಲಿ ಮಕ್ಕಳ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಮಕ್ಕಳ ಹಕ್ಕಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು.

ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್. ಮಾತನಾಡಿ, ಪೋಕ್ಸೋ ಕಾಯ್ದೆಯ ಅನುಷ್ಠಾನ ಸಮರ್ಪಕವಾಗಿ ಜಾರಿಗೊಳಿಸುವ ಹೊಣೆಗಾರಿಕೆ ಪೊಲೀಸ್ ಇಲಾಖೆ ಮೇಲಿದೆ. ಠಾಣಾಧಿಕಾರಿಗಳು ಇದನ್ನರಿತು ಕೆಲಸ ಮಾಡಬೇಕು ಎಂದರು.

ಎಸ್.ಪಿ. ಇಶಾ ಪಂತ್ ಮಾತನಾಡಿ, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಲ್ಲಿ ಆರೋಪಿತರು, ಕಾನೂನು ಸಂಘರ್ಷಕೆ ಒಳಗಾದ ಮಕ್ಕಳು ಹೆಚ್ಚಿದ್ದಾರೆ. ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಅವರಲ್ಲಿ ಆಚಾರ-ವಿಚಾರವನ್ನು ಬಿತ್ತುವ ಹೊಣೆಗಾರಿಕೆ ಪಾಲಕ-ಪೋಷಕರ ಮೇಲಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ವಿ.ಪಾಟೀಲ್ ಮಾತನಾಡಿ, ಜಿಲ್ಲಾಡಳಿತದಿಂದ ಮಕ್ಕಳ ಮೇಲಿನ ದೌರ್ಜನ ತಡೆಗೆ ಸುಮಾರು 425 ತರಬೇತಿದಾರರಿಗೆ ಇಂದು ತರಬೇತಿ ನೀಡಲಾಗುತ್ತಿದ್ದು, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರು, ಶಿಕ್ಷಕರು ತರಬೇತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಭಟ್ ಅವರು, “ಮಕ್ಕಳ ಹಕ್ಕುಗಳು, ಮಕ್ಕಳ ಕಾಯ್ದೆ ಮತ್ತು ಮಕ್ಕಳಿಗೆ ಅರಿವು ಮೂಡಿಸುವ ಬಗೆ ಹೇಗೆ” ಎಂಬ ವಿಷಯದ ಕುರಿತು ಮತ್ತು ಹರೀಶ ಜೋಗಿ ಅವರು “ಬಾಲ್ಯ ವಿವಾಹ ಮಕ್ಕಳ ಪುನರ್ವಸತಿ ಯೋಜನೆಗಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವೆಸಗಿದಲ್ಲಿ ಇರುವ ಶಿಕ್ಷೆ” ಕುರಿತು ಮಾತನಾಡಿದರು.

ತರಬೇತಿ ಕಾರ್ಯಾಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ ದೇವಿದಾಸ, ಎ.ಸಿ.ಪಿ. ದೀಪಕ್ ಎಂ.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನವೀನಕುಮಾರ ಯು., ಪೊಲೀಸ್ ಅಧಿಕಾರಿ ಉಮೇಶ ಚಿಕ್ಕಮಠ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಣಾಧಿಕಾರಿ ಭರತೇಶ ಶೀಲವಂತ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here