ಕಲಬುರಗಿ; ಕೃಷ್ಣಾನದಿಗೆ ಅಡ್ಡಲಾಗಿ ಕಟ್ಟಲಾಗಿರುವ ನಾರಾಯಣಪುರ ಬಸವಸಾಗರ ಜಲಾಶಯದ ಎಡದಂಡೆ ಕಾಲುವೆಯ ಮೇಲಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ, ಯಾದಗಿರಿ ದಿಲ್ಲೆಯ ಶಹಾಪುರ, ಮುದಬಾಳ್ ವ್ಯಾಪ್ತಿಯ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ರೈತರ ಬೆಳೆಗಳಿಗೆ ನೀರಿನ ಅಗತ್ಯತೆ ವಿಚಾರವಾಗಿ ಬೆಂಗಳೂರಲ್ಲಿ ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಅವರು ಸಿಎಂ ಸಿದ್ದರಾಮಯ್ಯನವರನ್ನು ಕಂಡು ಸಂಪೂರ್ಣ ಮಾಹಿತಿ ಹಂಚಿಕೊಂಡು ರೈತರ ನೆರವಿಗೆ ಬರುವಂತೆ ಕೋರಿದ್ದಾರೆ.
ಸಣ್ಣ ಕೇಗಾರಿಕೆ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪುರ್ ಅವರೊಂದಿಗೆ ಜೊತೆಗೂಡಿ ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಭೇಟಿಯಾಗಿದ್ದೇವು. ಯಾದಗಿರಿ ಜಿಲ್ಲೆಯ ನಾರಾಯಣಪುರ ಎಡದಂಡೆಯ ಮುಖ್ಯ ಕಾಲುವೆಗಳಾದ ಜೇವರ್ಗಿ , ಮುದುಬಾಳ ,ಶಹಾಪುರ್, ಕಾಲುವೆ ವ್ಯಾಪ್ತಿಯ ರೈತರ ಎದುರಿಸುತ್ತಿರುವ ನೀರಾವರಿ ಸಮಸ್ಯೆಯ ಕುರಿತು ಹಾಗೂ ರೈತರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಯಿತು.
ರೈತರು ತುಂಬಾ ಸಂಕಷ್ಟದಲ್ಲಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ನಾರಾಯಣಪುರ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಬಿಡುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ಕೂಡಾ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳು ನಮ್ಮ ಈ ರೈತರ ಪರವಾಗಿರುವಂತಹ ಬೇಡಿಕೆಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶರಾದ ಮೋಹನ್ ಕೆ, ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.