ಕಲಬುರಗಿ: ಡಿ. ದೇವರಾಜ ಅರಸು ನಿಗಮ ಸೇರಿದಂತೆ ವಿವಿಧ 8 ನಿಗಮಗಳ ಕಲಬುರಗಿ ವಿಭಾಗದ ಜಿಲ್ಲಾ ವ್ಯವಸ್ಥಾಪಕರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿ-ಸಿಬ್ಬಂದಿಗಳಿಗೆ ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಗಮದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳ ಕುರಿತು ತರಬೇತಿ ಆಯೋಜಿಸಲಾಗಿತ್ತು.
ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ವ್ಯವಸ್ಥಾಪರು, ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ವಿವಿಧ ನಿಗಮಗಳ ಯೋಜನೆಗಳ ಅನುಷ್ಠಾನ, ಭದ್ರತಾ ದಾಖಲಾತಿಗಳ ಸಂಗ್ರಹಣೆ, ಮರುಪಾವತಿ, ಘಟಕಗಳ ತಪಾಸಣೆ, ಗಂಗಾ ಕಲ್ಯಾಣ ಯೋಜನೆಯ ತಂತ್ರಾಶದ ಬಳಕೆ ಹಾಗೂ ಲೆಕ್ಕ ಪತ್ರಗಳ ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಹೆಚ್. ಮಾಲಿಪಾಟೀಲ, ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮೇಶ ಸಂಗಾ, ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶ ಆರ್. ಪಾಗೋಜಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗೀತಾ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಸ್. ಭಾವನಾ ಭಾಗವಹಿಸಿದ್ದರು.
ತರಬೇತಿಗೆ ಕಲಬುರಗಿ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಕಲಬುರಗಿ, ಬಳ್ಳಾರಿ, ಬೀದರ, ರಾಯಚೂರು, ಕೊಪ್ಪಳ, ಯಾದಗಿರಿ ವಿಜಯನಗರ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರು ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.