ಕಲಬುರಗಿ: ಬರ ಪರಿಹಾರ ನಿರ್ವಹಣೆಗಾಗಿ ರಾಜ್ಯಕ್ಕೆ ಒಂದು ವಾರದೊಳಗೆ ಪರಿಹಾರ ಕೊಡುವ ತೀರ್ಮಾನ ಕೈಗೊಳ್ಳವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾಕೀತು ಮಾಡಿದ್ದು ರಾಜ್ಯ ಸರ್ಕಾರಕ್ಕೆ ಸಿಕ್ಕ ನ್ಯಾಯ ಎಂದು ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯಸಿಂಗ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18, 171.48 ಕೋಟಿ ರೂ. ಬರ ಪರಿಹಾರ ಕೊಡಿಸುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸುವಂತೆ ಚುನಾವಣಾ ಆಯೋಗ ಕೂಡ ಅನುಮತಿ ನೀಡಿದೆ ಎಂದು ಅವರು ತಿಳಿಸಿದರು.
ಕೇಂದ್ರದಲ್ಲಿ ಕಳೆದ 10 ವರ್ಷದಿಂದ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಒಕ್ಕೂಟ ವ್ಯವಸ್ಥೆಯ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಮೋದಿ ಸರ್ಕಾರಕ್ಕೆ ಚುನಾವಣಾ ವೇಳೆಯಲ್ಲಿ ಮಾತ್ರ ಕರ್ನಾಟಕ, ಕಲ್ಯಾಣ ಕರ್ನಾಟಕ ನೆನಪಾಗುತ್ತದೆ ಎಂದು ಗೇಲಿ ಮಾಡಿದರು.
ಐದು ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯದ ಜನರ ಮನಗೆದ್ದಿರುವ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದೆ ಎಂದು ತಿಳಿಸಿದರು.
ಕೆಕೆಆರ್ ಡಿಬಿಗೆ ರಾಜ್ಯ ಸರ್ಕಾರ 3000 ಕೋಟಿ ರೂ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಈಗಾಗಲೇ 17,500 ಕೋಟಿ ವಿವಿಧ ಯೋಜನೆಗಳಿಗಾಗಿ ಉಪಯೋಗಿಸಲಾಗಿದೆ. ಒಟ್ಟು 5000 ಕೋಟಿ ರೂ. ಖರ್ಚು ಮಾಡುವ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ,ಎಪಿಎಂಸಿ ಮಾಜಿ ಅಧ್ಯಕ್ಷ ಶರಣು ಭೂಸನೂರ, ಈರಣ್ಣ ಜಳಕಿ, ಪಿಡ್ಡಪ್ಪ ಜಾಲಗಾರ, ಮಹಾಂತೇಶ ಕೌಲಗಿ ಇತರರಿದ್ದರು.
ಕಾಂಗ್ರೆಸ್ ಗ್ಯಾರಂಟಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಉತ್ತಮ ವಾತಾವರಣ ಕಂಡು ಬರುತ್ತಿದೆ. ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಗೆಲುವು ಖಚಿತ ಎಂದು ಡಾ. ಅಜಯಸಿಂಗ್ ನೀಲಕಂಠರಾಯ ಮೂಲಗೆ ಹಾಗೂ ಹಿರಿಯ ಮುಖಂಡ ಅಲ್ಲಮ ವೀರಭದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.