ಕಲಬುರಗಿ: ವಚನ ಪಾಲನೆ ಮಾಡದೆ ರೈತರಿಗೆ ದ್ರೋಹ ಬಗೆದ ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕರೆ ನೀಡಿದರು.
ರೈತರ ಆದಾಯ ದುಪ್ಪಟ್ಟು ಮಾಡುವುದು, ರೈತರ ಸಾಲಾ ಮನ್ನಾ, ರೈತರಿಗೆ ಬಡ್ಡಿ ರಹಿತ ಸಾಲ ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂಬ ಭರವಸೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ರೈತ ಜನರಿಗೆ ದ್ರೋಹ ಮಾಡಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಪಾದಿಸಿದರು.
ಕಾರ್ಪೋರೇಟ್ ಜನರಿಗೆ ಅನುಕೂಲ ಕಲ್ಪಿಸಲು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಭೂ ಕಾಯ್ದೆಗೆ ತಿದ್ದುಪಡಿ, ಗುತ್ತಿಗೆ ಕಾಯ್ದೆಗೆ ತಿದ್ದುಪಡಿ ಮಾಡಲು ಹವಣಿಸಿರುವ ಕೇಂದ್ರದ ಬಿಜೆಪಿ ಸರ್ಕಾರ ರೈತರ ಸಾಲಾ ಮನ್ನಾ ಮಾಡದೆ ಬಂಡವಾಳಶಾಹಿಗಳ ಸಾಲವನ್ನು ಮನ್ನಾ ಮಾಡಿದೆ ಎಂದು ದೂರಿದರು.
ಬಂಡವಾಳಶಾಹಿಗಳ ಪರವಾದ, ರೈತ ವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆದು ರೈತ ಸಮುದಾಯ ಹಾಗೂ ದೇಶ ಉಳಿವಿಗೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳಿಗೆ ಲೋಕಸಭಾ ಚುನಾವಣೆಯಲ್ಲಿ ಮತ ಹಾಕಬಾರದು ಎಂದು ಫರ್ಮಾನು ಹೊರಡಿಸಿದ ಅವರು, ಈ ಕುರಿತಾಗಿ ಎಲ್ಲೆಡೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಜಿಲ್ಲಾಧ್ಯಕ್ಷರಾದ ನಾಗೇಂದ್ರಪ್ಪ ತಂಬೆ, ಪಾರ್ವತಿ, ರಮೇಶ ರಾಗಿ ಇತರರಿದ್ದರು.