ಸುರಪುರ : ರಾಯಚೂರು ಲೋಕಸಭೆ ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ತಾಲೂಕಿನ ದೇವತ್ಕಲ್ ಗ್ರಾಮಕ್ಕೆ ಮೇ1 ರಂದು ಪ್ರಜಾಧ್ವನಿ ಯಾತ್ರೆ ಪ್ರಯುಕ್ತ ಬೃಹತ್ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಸುರಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾಳೆ ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಕಾಂಗ್ರೆಸ್ ಪಕ್ಷದ ಧುರೀಣರು,ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮೇ1 ರಂದು ಹಮ್ಮಿಕೊಂಡಿರುವ ಬೃಹತ್ ಬಹಿರಂಗ ಸಭೆಯು ಗ್ರಾಮದ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಮದ್ಯಾಹ್ನ 12ಗಂಟೆ ನಡೆಯಲಿದ್ದು ಎಐಸಿಸಿ ಅಧ್ಯಕ್ಷ ಖರ್ಗೆಜಿ,ಮುಖ್ಯಮಂತ್ರಿಗಳು,ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರು ಹೆಲಿಕಾಪ್ಟರ್ ಮೂಲಕ ಆಗಮಿಸುವರು ಎಂದು ತಿಳಿಸಿದ ಅವರು ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕ್ಷೇತ್ರದ 40 ರಿಂದ 50ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದರು.
ನಮ್ಮ ತಂದೆಯವರ ಅಕಾಲಿಕ ನಿಧನದಿಂದ ಆಘಾತಕ್ಕೆ ಒಳಗಾಗಿದ್ದ ನಮ್ಮ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಮ್ಮ ಬೆನ್ನ ಹಿಂದೆ ನಿಂತುಕೊಂಡು ಧೈರ್ಯ ತುಂಬುತ್ತಿದ್ದಾರೆ ಅನಿವಾರ್ಯವಾಗಿ ಎದುರಾದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ ನನಗೆ ಕ್ಷೇತ್ರದ ಮುಖಂಡರು ಪ್ರೋತ್ಸಾಹಿಸುತ್ತಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಹೋಗ ವೇಳೆಯಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜನತೆ ನಮ್ಮನ್ನು ಉತ್ಸಾಹದಿಂದ ಬರಮಾಡಿಕೊಳ್ಳುತ್ತಿದ್ದಾರೆ ಈಗಾಗಲೇ ಕ್ಷೇತ್ರದ ಬಹುತೇಕ ಗ್ರಾಮಗಳಿಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ನನ್ನ ತಂದೆಯ ಮೇಲಿಟ್ಟಿದ್ದ ಅಭಿಮಾನ ಹಾಗೂ ಪ್ರೀತಿಯನ್ನು ಇನ್ನಷ್ಟು ಹೆಚ್ಚು ತೋರುತ್ತಿದ್ದಾರೆ ನಮ್ಮ ತಂದೆಯವರು ತಮ್ಮ ಅಧಿಕಾರ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್ ಸರಕಾರದ ಜನಪರ ಆಡಳಿತ ಹಾಗೂ ಚುನಾವಣೆಗಿಂತ ಮುಂಚೆ ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದುಕೊಂಡಿರುವುದು ಈಗಿನ ಉಪ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿ ಗೆಲ್ಲಿಸುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠಲ್ ಯಾದವ, ಪ್ರಮುಖರಾದ ರಾಜಾ ಕೃಷ್ಣಪ್ಪ ನಾಯಕ , ಶಾಂತಗೌಡ ಚನ್ನಪಟ್ಟಣ, ರಾಜಶೇಖರಗೌಡ ಪಾಟೀಲ್ ವಜ್ಜಲ್, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ದುರ್ಗಪ್ಪ ಗೋಗಿಕೇರ, ರವಿಚಂದ್ರ ಸಾಹುಕಾರ ಆಲ್ದಾಳ, ರಂಗನಗೌಡ ಪಾಟೀಲ್ ದೇವಿಕೇರಿ, ಬೀರಲಿಂಗ ಬಾದ್ಯಾಪುರ ಇದ್ದರು.