ಕಲಬುರಗಿ ರೈಲ್ವೆ ವಲಯ ಸ್ಥಾಪನೆಗೆ ಒತ್ತಾಯಿಸಿ ಸಂಸದ ರಾಧಾಕೃಷ್ಣ ದೊಡ್ಡಮನಿ ಕೇಂದ್ರ ರೇಲ್ವೆ ಸಚಿವರಿಗೆ ಮನವಿ

0
17

ಕಲಬುರಗಿ: ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ‌ ಅವರು ದೆಹಲಿಯಲ್ಲಿ ರೇಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ಕಲಬುರಗಿ ರೇಲ್ವೆ ವಲಯ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಈ ಭಾಗದ ಹಲವಾರು ರೇಲ್ವೆ ಕಾಮಗಾರಿ / ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

2014-15 ರ ಮಧ್ಯಂತರ ಬಜೆಟ್ ನಲ್ಲಿ ಕಲಬುರಗಿ ಯಲ್ಲಿ ನೂತನ ರೇಲ್ವೆ ವಲಯ ಮಂಜೂರಾಗಿ ಅದಕ್ಕೆ‌ ಬೇಕಾಗುವ ₹ 5 ಕೋಟಿ ಅನುದಾನವನ್ನೂ ಕೂಡಾ ತೆಗೆದಿರಿಸಲಾಗಿತ್ತು. ಇದಲ್ಲದೇ, ಯೋಜನೆಗೆ ಅಗತ್ಯವಿರುವ ಜಮೀನನ್ನು ರಾಜ್ಯ ಸರ್ಕಾರ ಉಚಿತವಾಗಿ ಒದಗಿಸಿದೆ.

Contact Your\'s Advertisement; 9902492681

ಕಲಬುರಗಿ ಜಿಲ್ಲೆ ಹಿಂದುಳಿದ ಕಲ್ಯಾಣ ಕರ್ನಾಟಕದ ಭಾಗವಾಗಿದ್ದು ಈ ಭಾಗದ ಸಮಗ್ರ ಅಭಿವೃದ್ದಿಗಾಗಿ ಸಂವಿಧಾನದ ಆರ್ಟಿಕಲ್ 371(ಜೆ) ಜಾರಿಗೆ ತರುವ ಮೂಲಕ ಅನುದಾನ ಒದಗಿಸಲಾಗುತ್ತಿದೆ.

ಈ ಯೋಜನೆ ಸ್ಥಾಪನೆಗೆ ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಜನರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಹಾಗಾಗಿ, ಕಲಬುರಗಿ ಯಲ್ಲಿ ರೇಲ್ವೆ ವಲಯ ಸ್ಥಾಪನೆ ಮಾಡುವ ಸಲುವಾಗಿ ಕೂಡಲೇ ರೇಲ್ವೆ ಪ್ರಾಧಿಕಾರ ಅಥವಾ ಸಂಬಂಧಿಸಿದವರ ಗಮನಕ್ಕೆ ತಂದು ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಸದರು ಪತ್ರದಲ್ಲಿ ವಿನಂತಿಸಿದ್ದಾರೆ.

ಇದಲ್ಲದೇ, ಕಲಬುರಗಿ ಲೋಕಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಬಗ್ಗೆ ರೇಲ್ವೆ ಸಚಿವರ ಗಮನಕ್ಕೆ ತಂದಿದ್ದಾರೆ.

1) ರೇಲ್ವೆ ಬೋಗಿ ಕಾರ್ಖಾನೆ ವಿಸ್ತರಣೆ : ಯಾದಗಿರಿ ಜಿಲ್ಲೆಯ ಕಡೇಚೂರು ಬಾಡಿಯಾಳ ಕೈಗಾರಿಕ ಪ್ರದೇಶದಲ್ಲಿ ಸುಮಾರು 150 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾದ ರೇಲ್ವೆ ಬೋಗಿ ಕಾರ್ಖಾನೆಯಿಂದ ಅಗತ್ಯವಿರುವಷ್ಟು ಬೋಗಿ ತಯಾರಿಸಲು ಆಗುತ್ತಿಲ್ಲ. ಹಲವಾರು ವರ್ಷಗಳು ಕಳೆದರೂ ಕೂಡಾ ಈ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಹಾಗಾಗಿ, ಸದರಿ ಕಾರ್ಖಾನೆಯ ವಿಸ್ತರಣೆ ಅಗತ್ಯವಿದ್ದು ಕ್ರಮ ಕೈಗೊಳ್ಳುವುದು.

2) ಕಲಬುರಗಿ ರೇಲ್ವೆ ನಿಲ್ದಾಣದ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಎರಡು ಪಿಟ್ ಲೈನ್ ನಿರ್ಮಾಣ ಕಾರ್ಯ ಮಂಜೂರಾಗಿದೆ. ದಕ್ಷಿಣ ಭಾಗದಲ್ಲಿ ಪಿಟ್ ಲೈನ್ ಕಾಮಗಾರಿ ಪೂರ್ಣಗೊಂಡು ಕಾರ್ಯನಿರ್ವಹಿಸುತ್ತಿದೆ. ಆದರೆ ಉತ್ತರ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ.

3) ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಮುಂಬೈ ಕರ್ನಾಟಕದೊಂದಿಗೆ ಸಂಪರ್ಕಿಸುವ ಗದಗ ವಾಡಿ ನೂತನ ರೈಲ್ವೆ ಮಾರ್ಗದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಸದರಿ ಕಾಮಗಾರಿ ತೀವ್ರಗತಿಯಲ್ಲಿ ಪೂರ್ಣಗೊಳಿಸಬೇಕು.

4) ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 150 ಪೂರ್ಣಗೊಂಡಿದ್ದು ಇಕ್ಕೆಲಗಳ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ. ಆದರೆ, ರೇಲ್ವೆ ಮೇಲ್ಸೇತುವೆ ಕಾಮಗಾರಿ ಇನ್ನೂ ಪ್ರಾರಂಭಗೊಂಡಿಲ್ಲ ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು.

5) ಕಲಬುರಗಿ ಹಾಗೂ ಬೆಂಗಳೂರು ಮಧ್ಯೆ ಹೆಚ್ಚಿನ ಸಂಖ್ಯೆಯ ರೇಲ್ವೆಗಳ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here