ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು ಮುಖ್ಯಮಂತ್ರಿಗಳ ಸಲಹೆಗಾರ, ಶಾಸಕ ಬಿ.ಆರ್. ಪಾಟೀಲ ಆಗ್ರಹಿಸಿದರು.
ಕಳೆದ 20 ವರ್ಷಗಳಿಂದ ಇಲ್ಲಿಯೇ ಠಿಕಾಣಿ ಹೂಡಿರುವ ಈ ಅಧಿಕಾರಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸದಿರುವ ಕಾರಣ ನಗರದ ಸಾರ್ವಜನಿಕರು ಕುಡಿವ ನೀರು, ರಸ್ತೆ, ಡ್ರೈನೇಜ್ , ಸಾರ್ವಜನಿಕ ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳಿಂದ ವಂಚಿತರಾಗುವಂತಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಈ ಬಾರಿ ಮಳೆಗಾಲ ವಿಪರೀತವಾಗಿರುವುದರಿಂದ ಸಾರ್ವಜನಿಕರಿಗೆ ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇವರನ್ನು ವರ್ಗಾವಣೆ ಮಾಡುವಂತೆ ಪಾಲಿಕೆ ಮಹಾಪೌರ ಯಲ್ಲಪ್ಪ ಎಸ್. ನಾಯಕೊಡಿ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿವ ನೀರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳಿಗೆ ಹೇಳೋರು ಕೇಳೋರು ಯಾರೂ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ತಾವು ಸಹ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಿಳಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತಿರಿಸಿದರು.