ಕಲಬುರಗಿ: ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಡ್ರದಿಂದ ರಾಜ್ಯಕ್ಕೆ 4 ಟಿ.ಎಂ.ಸಿ ನೀರು ಬಿಡುಗಡೆ ಮಾಡುವಂತೆ ಅಲ್ಲಿನ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಇದಕ್ಕೆ ಬದಲಾಗಿ ರಾಜ್ಯದ ತುಬಚಿ ಏತ ನೀರಾವರಿ ಯೋಜನೆಯಿಂದ ನೀರಿನ ಲಭ್ಯತೆ ಅನುಗುಣವಾಗಿ ಮಹಾರಾಷ್ಡ್ರದ ಬೋರಸಿ ನದಿಗೆ ನೀರು ಬಿಡುವ ಕುರಿತಂತೆ ಚರ್ಚಿಸಲಾಗುವುದು ಎಂದು ಹೇಳಿದ್ದೇನೆ ವಿನಹ ಬಿಡುಗಡೆ ಮಾಡಲಾಗುವುದು ಎಂದಿಲ್ಲ. ಇದೇ ಮಾತನ್ನು ಮಹಾರಾಷ್ಡ್ರದ ಚುನಾವಣಾ ಪ್ರಚಾರದಲ್ಲಿಯೂ ತಿಳಿಸಿದ್ದೇನೆ. ಯಾವುದೇ ಅಪಾರ್ಥ ಮಾಡಿಕೊಳ್ಳಬಾರದು ಹೇಳಿದರು.
ಶೀಘ್ರದಲ್ಲಿಯೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು. 371ಜೆ ಅನ್ಚಯ ರಚನೆಗೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಡಿ.ಸಿ.ಎಂ. ಗೋವಿಂದ ಕಾರಜೋಳ ಅವರನ್ನು ಶೀಘ್ರವೆ ನೇಮಕ ಮಾಡಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಕಲಬುರಗಿ ಜಿಲ್ಲೆಗೆ ಇಂದು ಬೆಳಿಗ್ಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೇವಲ ಘಾಣಗಾಪೂರದಲ್ಲಿ ದತ್ತನ ದರ್ಶನದ ಬಳಿಕ ದತ್ತನ ಕ್ಷೇತ್ರವಾದ ದೇವಳ ಗಾಣಗಾಪೂರ ಅಭಿವೃದ್ಧಿಗೆ 10 ಕೋಟಿ ರೂ. ಆನುದಾನ ಬಿಡುಗಡೆ ಮಾಡಲಾಗುವುದೆಂದು ತಿಳಿಸಿ ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಬಸವರಾಜ ಮತ್ತಿಮೂಡ, ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೆಲ್ಕೂರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಆಧ್ಯಕ್ಷ ಬಾಬುರಾವ ಚಿಂಚನಸೂರು, ಮಾಜಿ ಶಾಸಕರಾದ ಮಾಲಿಕಯ್ಯ ಗುತ್ತೆದಾರ, ದೊಢ್ಡಪ್ಪಗೌಡ ಪಾಟೀಲ, ಶಶೀಲ ನಮೋಶಿ ಇದ್ದರು.