ಇ-ಮೀಡಿಯಾ ಲೈನ್ ನ್ಯೂಸ್
ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯನ ವರ 905ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವು ಎಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜನೆವರಿ 21ರಂದು ಬೆಳಿಗ್ಗೆ 11ಗಂಟೆಗೆ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಚಾಲನೆ ನಿಡುವರು. ಅಂದು ಮಧ್ಯಾಹ್ನ 02 ಗಂಟೆಗೆ ಎಸ್.ಎಂ. ಪಂಡಿತ್ ರಂಗಮಂದಿರಕ್ಕೆ ಮೆರವಣಿಗೆ ತಲುಪಿದ ನಂತರ ವೇದಿಕೆಯ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಿರಿಯ ಜನಪ್ರತಿನಿಧಿಗಳು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಇನ್ನು ಜಯಂತ್ಯೋತ್ಸವ ಸಮಿತಿಗೆ ಶಿವಾನಂದ ಹೊನಗುಂಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಜಯಂತ್ಯೋತ್ಸವ ನಿಮಿತ್ಯ ಯುನೈಟೆಡ್ ಆಸ್ಪತ್ರೆಯವರು ರಿಯಾಯಿತಿ ದರದಲ್ಲಿ ಆರೋಗ್ಯ ಕಾರ್ಡ್ ವಿತರಣೆ ಮಾಡಲಿದ್ದಾರೆಂದು ತಿಳಿಸಿದ ಅವರು, ಸಮಾಜದ ಬಹುದಿನದ ಬೇಡಿಕೆಯಾಗಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಸ್ಥಾಪನೆಗೆ ಕಾಲ ಸನ್ನಿಹಿತವಾಗಿದೆ ಪಾಲಿಕೆ ಆಯುಕ್ತರು ಸ್ಥಳವಕಾಶ ಕಲ್ಪಿಸುವುದಾಗಿ ಹೇಳಿದ್ದಾರೆ. ಹಾಗಾಗಿ ಮೂರ್ತಿ ಸ್ಥಾಪನೆಗೆ ಭೂಮಿ ಪೂಜೆ ಸಹ ಮಾಡಲಾಗುವುದೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾದ ಶಿವಾನಂದ ಹೊನಗುಂಟಿ, ಅವ್ವಣ್ಣ, ಮ್ಯಾಕೇರಿ, ಗುಂಡು ಐನಾಪೂರ, ಶಾಂತಪ್ಪ ಕೂಡಿ, ಬಸವರಾಜ್ ಬೂದಿಹಾಳ, ಅಣ್ಣಪ್ಪ ಜಮಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.