ರಾಜ್ಯಸಭೆ ಚುನಾವಣೆಯಲ್ಲಿ ಖರ್ಗೆ ಕಣಕ್ಕಿಳಿಯುವುದು ಖಚಿತ..!?

1
1053

ಬೆಂಗಳೂರು: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಯುವುದು ಖಚಿತವಾಗಿದೆ. ಈ ನಡುವೆ ಜೆಡಿಎಸ್ನಿಂದ ಎಚ್.ಡಿ.ದೇವೇಗೌಡರನ್ನೂ ಕಣಕ್ಕಿಳಿಸಬೇಕೆಂದು ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ, ವೀರಪ್ಪಮೊಯ್ಲಿ, ಕೆ.ಎಚ್.ಮುನಿಯಪ್ಪ ಸೇರಿದಂತೆ ಅನೇಕ ಹಿರಿಯ ನಾಯಕರು ಸೋಲು ಕಂಡಿದ್ದರಿಂದ ಸಂಸತ್ನಲ್ಲಿ ಕರ್ನಾಟಕದ ಪರವಾಗಿ ಧ್ವನಿಯೇ ಇಲ್ಲದಂತಾಗಿದೆ. ಹಾಗಾಗಿ ಬಹಳಷ್ಟು ಸಂದರ್ಭಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಕೇಳುವವರು, ಹೇಳುವವರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Contact Your\'s Advertisement; 9902492681

ಸಮ್ಮಿಶ್ರ ಸರ್ಕಾರ ಪತನವಾಗಿ ಕರ್ನಾಟಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವಂತೂ ಅನುದಾನ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ.

ಜೂನ್ 25ಕ್ಕೆ ರಾಜ್ಯಸಭಾ ಸದಸ್ಯರಾದ ಕಾಂಗ್ರೆಸ್ನ ರಾಜೀವ್ಗೌಡ, ಬಿ.ಕೆ.ಹರಿಪ್ರಸಾದ್, ಬಿಜೆಪಿಯ ಪ್ರಭಾಕರ್ ಕೋರೆ, ಜೆಡಿಎಸ್ನ ಕುಪೇಂದ್ರರೆಡ್ಡಿ ಅವರು ನಿವೃತ್ತರಾಗುತ್ತಿದ್ದಾರೆ. ಸಂಖ್ಯಾಬಲ ಆಧರಿಸಿದರೆ ಕಾಂಗ್ರೆಸ್ ಒಂದು, ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲಬಹುದಾಗಿದೆ. ಜೆಡಿಎಸ್ಗೆ ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಿಲ್ಲವಾದರೂ ಕಾಂಗ್ರೆಸ್ ಮತ್ತು ಬಿಜೆಪಿಯ ಬೆಂಬಲ ಸಿಕ್ಕರೆ ಒಂದು ಸ್ಥಾನವನ್ನು ಗೆಲ್ಲಬಹುದಾಗಿದೆ.

ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಗೆಲ್ಲಿಸಿಕೊಳ್ಳಲು ಅಗತ್ಯವಾದ ಸಂಖ್ಯಾಬಲ ಇಲ್ಲ. ಹಾಗಾಗಿ ಕೆಲವು ಮತಗಳು ವ್ಯರ್ಥಗೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಬಿಜೆಪಿಯ ತಟಸ್ಥ ಮತಗಳನ್ನು ಬಳಸಿಕೊಂಡಿದ್ದೇ ಆದರೆ ರಾಜ್ಯಸಭೆಗೆ ಪ್ರಭಾವಿ ಧ್ವನಿಯುಳ್ಳ ಇಬ್ಬರು ನಾಯಕರನ್ನು ಕಳುಹಿಸಲು ಸಾಧ್ಯವಾಗುತ್ತದೆ. ರಾಜ್ಯದ ಹಿತಾದೃಷ್ಟಿಯಿಂದ ಈ ರೀತಿಯ ಬೆಳವಣಿಗೆಗಳು ಆಗಬೇಕೆಂಬ ಚರ್ಚೆಗಳು ನಡೆಯುತ್ತಿವೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here