ಯಾದಗಿರಿ: ಕೋವಿಡ್-19 ಪರೀಕ್ಷೆ: 5 ಹೊಸ ಮಾದರಿ ಸಂಗ್ರಹ: 16 ವರದಿ ನೆಗೆಟಿವ್

0
36

ಯಾದಗಿರಿ: ನೋವೆಲ್ ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು ೧೬ ವ್ಯಕ್ತಿಗಳ ಮಾದರಿಗಳ ಪೈಕಿ ಬಾಕಿಯಿದ್ದ ೭ ಮಾದರಿಗಳ ವರದಿ ಕೂಡ ಶನಿವಾರ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಶನಿವಾರ ಮತ್ತೆ ೫ ವ್ಯಕ್ತಿಗಳ ಮಾದರಿ ಸಂಗ್ರಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ ಪ್ರತ್ಯೇಕವಾಗಿರಿಸಿದ್ದ ಇಬ್ಬರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. ಅರಕೇರಾ (ಕೆ) ಹಾಸ್ಟೆಲ್‌ನ ಇನ್‌ಸ್ಟಿಟ್ಯೂಶನಲ್ ಕ್ವಾರಂಟೈನ್‌ನಲ್ಲಿ ೨೪ ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.

Contact Your\'s Advertisement; 9902492681

ನಿಜಾಮುದ್ದೀನ್ ಸಭೆಗೆ ಹೋದವರ ಮಾಹಿತಿ ನೀಡಿ: ನಿಜಾಮುದ್ದೀನ್ ತಬ್ಲಿಘಿ ಮಾರ್ಕಾಜ್ ಸಭೆಯಲ್ಲಿ ಭಾಗವಹಿಸಿ ಯಾದಗಿರಿ ಜಿಲ್ಲೆಗೆ ವಾಪಸ್ಸಾಗಿರುವ ಜನರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ ೦೮೪೭೩-೨೫೩೯೫೦ ಗೆ ಕರೆ ಮಾಡಿ ಮಾಹಿತಿ ನೀಡಲು ಅಪರ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಹೋಮ್ ಐಸೊಲೇಷನ್‌ನಲ್ಲಿ ೬೦ ಜನ: ಯಾದಗಿರಿ ತಾಲ್ಲೂಕಿನಲ್ಲಿ ೩೦ ಜನ, ಶಹಾಪೂರ ತಾಲ್ಲೂಕಿನಲ್ಲಿ ೧೯ ಹಾಗೂ ಸುರಪುರ ತಾಲ್ಲೂಕಿನಲ್ಲಿ ೨೨ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೭೧ ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಈ ೭೧ ಜನರ ಪೈಕಿ ಒಟ್ಟು ೧೧ ಜನ ೨೮ ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ ೬೦ ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

ವಿದೇಶಗಳಿಂದ ಬಂದವರನ್ನು ಮುಂಜಾಗ್ರತಾ ಕ್ರಮವಾಗಿ ದಿನಕ್ಕೆ ೨ ಬಾರಿಯಂತೆ ೧೪ ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವೈರಸ್ ಸೋಂಕಿತ ರೋಗಿಗಳಿಗಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ೧೫ ಹಾಗೂ ಹೊಸ ಜಿಲ್ಲಾಸ್ಪತ್ರೆಯಲ್ಲಿ ೧೦೦ ಐಸೊಲೇಷನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಸಹಾಯವಾಣಿ-೧೦೪ ಕ್ಕೆ ಬರುವ ಕರೆಗಳಿಗಾಗಿ ೩ ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ ೦೮೪೭೩-೨೫೩೯೫೦ ಗೆ ೭ ಕರೆಗಳು ಸ್ವೀಕೃತವಾಗಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ: ಕೋವಿಡ್-೧೯ ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ ೧೪ ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ ೦೮೪೭೩-೨೫೩೯೫೦ ಅಥವಾ ೨೪*೭ ಉಚಿತ ಆರೋಗ್ಯ ಸಹಾಯವಾಣಿ ೧೦೪ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here