ಕಲಬುರಗಿ: ಕರ್ನಾಟಕ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಮಸೂದೆ ಹಾಗೂ ಎಪಿಎಂಸಿ ಕಾಯಿದೆಗಳ ವಿರುದ್ದ ಬೃಹತ್ ಪೋಸ್ಟ್ ಕಾರ್ಡ್ ಅಭಿಯಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಿಂದ ಒಟ್ಟು 25,000 ಪೋಸ್ಟ್ ಕಾರ್ಡ್ ಗಳ ಮೂಲಕ ರೈತರು ತಮ್ಮ ವಿರೋಧ ವ್ಯಕ್ತಪಡಿಸಿ ಈ ಕೂಡಲೇ ಕಾಯಿದೆ ವಾಪಸ್ ಪಡೆಯುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕೇಂದ್ರದ ಮೋದಿ ಸರಕಾರ ರೈತವಿರೋಧಿ ಧೋರಣೆ ಅನುಸರಿಸುವ ಮೂಲಕ ಅನ್ನದಾತನ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಹೊಸ ಕಾಯಿದೆಗಳು ರೈತರ ಮರಣಶಾಸನವಾಗಲಿವೆ ಎಂದು ಹೇಳಿರುವ ಶಾಸಕ, ಕಾಂಗ್ರೆಸ್ ಪಕ್ಷ ಈ ರೈತವಿರೋಧಿ ಕಾಯಿದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೆ ರೈತರೊಂದಿಗೆ ಜೊತೆಗೂಡಿ ಹೋರಾಡುತ್ತದೆ ಎಂದರು.
ಈ ನಿಟ್ಟಿನಲ್ಲಿ ರೈತರಿಂದ ಸಹಿ ಸಂಗ್ರಹ ಮಾಡಿ ರಾಷ್ಟ್ರಪತಿಗಳಿಗೆ ಕಳಿಸಿಕೊಡುವ ಅಭಿಯಾನ ನಡೆಯುತ್ತಿದ್ದು, ಜೊತೆಗೆ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಿದ್ದು ಜಿಲ್ಲೆಯಿಂದ ಒಟ್ಟು 25,000 ಪೋಸ್ಟ್ ಕಾರ್ಡ್ಗಳನ್ನು ಒಳಗೊಂಡ ಮನವಿ ಪತ್ರವನ್ನು ರಾಷ್ಟ್ರಪತಿಗೆ ಕಳಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಿಂದ ಸಂಗ್ರಹಿಸಿದ ಪೋಸ್ಟ್ ಕಾರ್ಡ್ ಗಳನ್ನು ಕೆಪಿಸಿಸಿ ಕಚೇರಿಯ ಮೂಲಕ ದೆಹಲಿಯ ರಾಷ್ಟ್ರಪತಿ ಭವನಕ್ಕೆ ಕಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಸಂಗ್ರಹಿಸಿದ ಕಾರ್ಡ್ ಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.