ಕಲಬುರಗಿ: ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಂದು ಸಚಿವ ಸ್ಥಾನ ನೀಡದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಆರೋಪಿಸಿದ್ದಾರೆ.
2018ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚಿನ ಬಿಜೆಪಿ ಶಾಸಕರು ಆಯ್ಕೆ ಆಗಿದ್ದಾರೆ.ಒಂದು ರೀತಿಯಲ್ಲಿ ಈ ಭಾಗ ಬಿಜೆಪಿ ಪಕ್ಷದ ಗಡ ಎಂದು ಹೇಳುತ್ತಾರೆ.ಆದರೆ ಮುಖ್ಯಮಂತ್ರಿಗಳಿಗೆ ಗೊತ್ತಿದ್ದರೂ ಪದೇ ಪದೇ ಅನ್ಯಾಯ ಮಾಡುತ್ತಿದ್ದಾರೆ.
ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ಈ ಹಿಂದೆ ಇದ್ದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಂತ್ರಿ ಸ್ಥಾನ ನೀಡಲು ಚೌಕಾಶಿ ಮಾಡಿದ್ದರಿಂದ ಅಭಿವೃದ್ಧಿ ಹೇಗೆ ಸಾಧ್ಯ? ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಗೆ ಕಾಟಾಚಾರಕ್ಕೆ ಉಸ್ತುವಾರಿ ಸಚಿವರನ್ನು ನೇಮಿಸಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ.ಕೂಡಲೇ ಮುಖ್ಯಮಂತ್ರಿಗಳು ಮತ್ತೋಮ್ಮೆ ಸಂಪುಟ ವಿಸ್ತರಣೆ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನೀಡಬೇಕು.
ಇಲ್ಲದಿದ್ದಲ್ಲಿ ಇದಕ್ಕೆ ವಿರುದ್ಧವಾಗಿ ಕಲಬುರಗಿಯ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.