ಸುರಪುರ: ನಗರದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಪ್ರವಾಹ ನಿರ್ವಹಣೆ ಕುರಿತು ಮುಂಜಾಗೃತಾ ಕ್ರಮಕ್ಕಾಗಿ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ಈಗಾಗಲೇ ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಆಲಮಟ್ಟಿಯಿಂದ ಬಸವಸಾಗರ ಜಲಾಶಯಕ್ಕೂ ಹೆಚ್ಚಿನ ನೀರು ಹರಿದು ಬಂದು ಮತ್ತೆ ಪ್ರವಾಹ ಉಂಟಾಗುವ ಸಾಧ್ಯತೆ ಇದೆ,ಆದ್ದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಇಂದು ಸಭೆಯನ್ನು ನಡೆಸಲಾಗುತ್ತಿದ್ದು, ಪ್ರವಾಹ ಸಂದರ್ಭ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳ ಸಿದ್ಧತೆಯನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿಬಿಡುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಬಹುದು ಆದ್ದರಿಂದ ಗ್ರಾಮಗಳಲ್ಲಿನ ಜನರಿಗೆ ಎಚ್ಚರಿಕೆಯನ್ನು ನೀಡುವ ಜೊತೆಗೆ ಜನರು ನದಿ ದಂಡೆಯ ಕಡೆಗೆ ಹೋಗದಂತೆ ಎಚ್ಚರಿಕೆಯನ್ನು ನೀಡುವಂತೆ ತಿಳಿಸಿದರು.ನಂತರ ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿಯ ಮರಳುಗಾರಿಕೆಯ ಕುರಿತು ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಹಾಗು ಸಮಾಜ ಕಲ್ಯಾಣ ಇಲಾಖೆ ಅರಣ್ಯ ಇಲಾಖೆ ಲೋಕೊಪಯೋಗಿ ಇಲಾಖೆ ಅಧಿಕಾರಿಗಳು ಹಾಗು ವಿವಿಧ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.