ಚಿತ್ತಾಪುರ: ನಿಪ್ಪಾಣಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನಕ ಭವನ ಹಾಗೂ ಜೀವನ ಮರಡಗಿ ಗ್ರಾಮದಲ್ಲಿ 10 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂಬಿಗರ ಚೌಡಯ್ಯ ಭವನವನ್ನು ಶಾಸಕ ಪ್ರಿಯಾಂಕ್ ಖರ್ಗೆ ಇಂದು ಉದ್ಘಾಟನೆ ಮಾಡಿದರು.
ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಸ್ವಲ್ಪಮಟ್ಟಿಗೆ ತೊಡುಕುಂಟಾಗಿದ್ದು ನಿಜ. ಆದರೆ, ಇದೀಗ ಎಲ್ಲ ಅಡೆ-ತಡೆಗಳನ್ನು ಮೀರಿ ಕ್ಷೇತ್ರದ ಪ್ರತಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಮರುಚಾಲನೆ ನೀಡಲಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರವು ಚಿತ್ತಾಪುರ ತಾಲೂಕಿಗೆ ಬಿಡುಗಡೆಯಾಗಬೇಕಿದ್ದ ರೂ. 280 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈ ಅನುದಾನವನ್ನು ಆದಷ್ಟು ಶೀಘ್ರವಾಗಿ ಬಿಡುಗಡೆಗೊಳಿಸುವಂತೆ ನೂತನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಆಗ್ರಹಿಸುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಪ್ರಥಮ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ, ಗ್ರಾಮದ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಶಕ್ತಿ ಕಿಟ್ ವಿತರಿಸಲಾಯಿತು. ಗ್ರಾಮಸ್ಥರನ್ನು ಖುದ್ದು ಭೇಟಿ ಅವರ ಸಮಸ್ಯೆಗಳಿಗೆ ಕಿವಿಯಾಗಿದ್ದು, ಆತ್ಮತೃಪ್ತಿ ನೀಡಿದೆ. ಅವರ ಬೇಡಿಕೆಗಳನ್ನು ಆದಷ್ಟು ಶೀಘ್ರವಾಗಿ ಈಡೇರಿಸಲಾಗುವುದು ಎಂದು ತಿಳಿಸಿದರು.