ಕಲಬುರಗಿ ಸ್ವಚ್ಛ ಮತ್ತು ಹಸಿರು ನಗರವನ್ನಾಗಿಸಲು ಕರೆ: ನ್ಯಾಯಮೂರ್ತಿ ಸುಭಾಷ ಬಿ.ಆಡಿ

0
52

ಕಲಬುರಗಿ: ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಮತ್ತು ಜೈವಿಕ ತ್ಯಾಜ್ಯಗಳ ನಿರ್ವಹಣೆ ಮತ್ತು ಪಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಬರುವ ನವೆಂಬರ್ 1 ರೊಳಗಾಗಿ ಕಲಬುರಗಿ ನಗರವನ್ನು ಸ್ವಚ್ಛ ಮತ್ತು ಹಸಿರು ನಗರವನ್ನಾಗಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ ಬಿ.ಆಡಿ ಕರೆ ನೀಡಿದರು.

ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Contact Your\'s Advertisement; 9902492681

ರಾಜ್ಯದಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆ ಮಾರಾಟ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಲ್ಲದೇ ಘನತ್ಯಾಜ್ಯ ನಿರ್ವಹಣೆ ಕಾಯಿದೆ-2016 ಸಹ ಜಾರಿಗೆ ಬಂದಿರುತ್ತದೆ. ಕಸ ಸಂಗ್ರಹಣೆ ಮತ್ತು ವೈಜ್ಞಾನಿಕ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧ ಸಂಪೂರ್ಣ ಅನುಷ್ಟಾನಕ್ಕೆ ಸ್ಥಳೀಯ ಸಂಸ್ಥೆಗಳು ಕೂಡಲೇ ಬೈಲಾವನ್ನು ತಿದ್ದುಪಡಿ ಮಾಡಿಕೊಂಡು ಒಂದು ತಿಂಗಳೊಳಗೆ ಕಾರ್ಯಾನುಷ್ಡಾನಕ್ಕೆ ಸಿದ್ದಗೊಳ್ಳಬೇಕು. ಅಲ್ಲದೆ ಕಟ್ಟಡ ನಿರ್ಮಾಣ ಮತ್ತು ತೆರವಿನಿಂದ ಉತ್ಪತ್ತಿಯಾಗುವ ಕಸವನ್ನು ಸಹ ಎಲ್ಲೆಂದರಲ್ಲಿ ಹಾಕುವಂತಿಲ್ಲ. ಇದಕ್ಕಾಗಿ ಪಾಲಿಕೆಯಲ್ಲಿ ಆನ್‌ಲೈನ್ ವ್ಯವಸ್ಥೆ ಜಾರಿಗೆ ತರಬೇಕು. ಸಾರ್ವಜನಿಕರು ಕಟ್ಟಡ ನಿರ್ಮಾಣ ಕಾರ್ಯದಿಂದ ಉತ್ಪತ್ತಿಯಾಗುವ ಕಸ ಸಂಗ್ರಹಣೆ ಬಗ್ಗೆ ಪಾಲಿಕೆಗೆ ಮಾಹಿತಿ ನೀಡಿದರೆ, ಪಾಲಿಕೆಯೇ ಇದರ ಸಾಗಾಣಿಕೆ ಮಾಡಬೇಕು. ಸಾಗಾಣಿಕೆ ವೆಚ್ಚ ಸಾರ್ವಜನಿಕರೇ ಭರಿಸಬೇಕಾಗುತ್ತದೆ ಎಂದರು.

ಕಲಬುರಗಿ ನಗರದ ೫೫ ವಾರ್ಡಗಳಲ್ಲಿ ಪ್ರತಿದಿನ ಹಸಿ ಕಸ ಮಾತ್ರ ಸಂಗ್ರಹಣೆ ಮಾಡಬೇಕು. ಒಣ ಕಸವನ್ನು ವಾರದಲ್ಲಿ 2 ಬಾರಿ ಮಾಡಿದರು ಸಾಕು. ಮನೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವುದು. ಮನೆಯಿಂದಲೆ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿಬೇಕು. ನಮ್ಮ ಕಸ-ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ಕಸವನ್ನು ಮಿಶ್ರ ಗೊಬ್ಬರವನ್ನಾಗಿಸುವ ಪೈಪ್ ಕಂಪೋಸ್ಟಿಂಗ್ ವಿಧಾನ ತುಂಬಾ ಸರಳವಾಗಿದ್ದು, ಜನರಿಗೆ ಈ ಬಗ್ಗೆ ತಿಳಿಹೇಳಬೇಕು. ಇದಲ್ಲದೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಈ ಪದ್ಧತಿಯನ್ನು ತಮ್ಮ ಮನೆಯಲ್ಲಿಯೂ ಅಳವಡಿಸಿಕೊಳ್ಳಬೇಕು. ಈ ಸಂಬಂಧ ಡಿ.ಸಿ. ಸುತ್ತೋಲೆ ಹೊರಡಿಸಬೇಕು ಎಂದರು.

ಕಲಬುರಗಿ ನಗರದಲ್ಲಿ ವಾರ್ಡುವಾರು ಹಸಿ ಕಸದಿಂದ ಮಿಶ್ರಗೊಬ್ಬರ ಪರಿವರ್ತಿಸಲು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಪಾಲಿಕೆಯ ಆರೋಗ್ಯಾಧಿಕಾರಿಗಳು ಮಾಡಬೇಕು. ಈ ರೀತಿ ಉತ್ತೇಜನ ನೀಡುವ ಸಿಬ್ಬಂದಿಗಳಿಗೆ ಮತ್ತು ಮಿಶ್ರಗೊಬ್ಬರ ಮಾಡುವ ಸಾರ್ವಜನಿಕರಿಗೆ ಪಾಲಿಕೆಯಿಂದ ಇಂಸೆಂಟಿವ್ ನೀಡುವ ಕಾರ್ಯಕ್ರಮ ಜಾರಿಗೊಳಿಸಿದಲ್ಲಿ ಈ ಯೋಜನೆ ಸಾಕಾರಗೊಳ್ಳಲು ಯಾವುದೇ ಅಡ್ಡಿಯಿಲ್ಲ ಎಂದರು.

ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಪೌರ ಕಾರ್ಮಿಕರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳನ್ನು ಒದಗಿಸಬೇಕು. ವಿಶೇಷವಾಗಿ ಆರೋಗ್ಯ, ಗುಣಮಟ್ಟದ ಬೆಳಗಿನ ಉಪಹಾರ ಸೇರಿದಂತೆ ಪ್ರತಿದಿನ ಕೆಲಸ ಕಾರ್ಯಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಒದಗಿಸಬೇಕು. ಪೌರಕಾರ್ಮಿಕರು ಮಾಡುವ ಕೆಲಸ ನಾವು-ನೀವು ಮಾಡಲು ಆಗುವುದಿಲ್ಲ ಎಂಬುದನ್ನು ಮನಗಂಡು ಅವರನ್ನು ತುಂಬಾ ಗೌರವದಿಂದ ಕಾಣಿ. ಪ್ರತಿ ಪೌರಕಾರ್ಮಿಕರಿಗೆ ೭೫೦ ಮೀಟರ್ ಉದ್ದದ ರಸ್ತೆ ಸ್ವಚ್ಛತೆಗೆ ನಿಯೋಜಿಸಲಾಗಿರುತ್ತದೆ. ಅದರಂತೆ ಆ ಪರಿಮಿಧಿಯಲ್ಲಿ ಎಲ್ಲಿಯೆ ಕಸ ಕಂಡುಬಂದರು ಪೌರಕಾರ್ಮಿಕರೆ ಹೊಣೆಯಾಗುತ್ತಾರೆ. ಈ ಸಂಬಂಧ ಆರೋಗ್ಯ ನಿರೀಕ್ಷಕರು ಮೇಲುಸ್ತುವಾರಿ ಮಾಡಬೇಕು ಎಂದು ನ್ಯಾ.ಸುಭಾಷ ಬಿ.ಆಡಿ ಹೇಳಿದರು.

ಕಲಬುರಗಿಯ ಚಾಂಪ್ ಸಂಸ್ಥೆಯ ಜೈವಿಕ ತ್ಯಾಜ್ಯ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆಯಾದರು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಜೈವಿಕ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿಲ್ಲ. ಚಾಂಪ್ ಸಂಸ್ಥೆಯ ಸಿಇಇ ಅವರು ಕೂಡಲೇ ಜಿಲ್ಲಾಧಿಕಾರಗಳೊಂದಿಗೆ ಭೇಟಿಯಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಬರುವಂತೆ ನೋಡಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವನ್ನು ಚಾಂಪ್ ಸಂಸ್ಥೆಗೆ ನೀಡುವುದು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಪ್ಲಾಸ್ಟಿಕ್‌ನಲ್ಲಿ ಆಹಾರ ಪದಾರ್ಥಗಳನ್ನು ನೀಡುವಂತಿಲ್ಲ: ಹೋಟೆಲ್-ರೆಸ್ಟೋರೆಂಟ್ ಗಳಲ್ಲಿ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್‌ನಲ್ಲಿ ನೀಡುವಂತಿಲ್ಲ. ಸಾರ್ವಜನಿಕರಿಂದಲೇ ಸ್ಟೀಲ್ ಪಾತ್ರೆಗಳನ್ನು ಪಡೆದು ಅದರಲ್ಲಿಯೇ ನೀಡಬೇಕೆಂದರು.
ಶಾಪಿಂಗ್ ಮಾಲ್‌ನಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ: ಶಾಪಿಂಗ್ ಮಾಲ್ ಸೇರಿದಂತೆ ವಾಣಿಜ್ಯ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು,ಕೂಡಲೇ ಇದನ್ನು ನಿಯಂತ್ರಿಸಲು ಅಧಿಕಾರಿಗಳು ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ತಿಂಗಳೊಳಗೆ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಿ: ಮುಂದಿನ ಒಂದು ತಿಂಗಳೊಳಗಾಗಿ ಕಲಬುರಗಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಕ್ಕೆ ವಿಶೇಷ ಅಭಿಯಾನ ಕೈಗೊಳ್ಳಿ ಎಂದು ನ್ಯಾ.ಸುಭಾಷ ಬಿ.ಆಡಿ ಅವರು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ. ರಾಜಾ ಮಾತನಾಡಿ ಜಿಲ್ಲೆಯ ಗ್ರಾಮೀಣ ಭಾಗದ ೪೬ ಗ್ರಾಮಗಳನ್ನು ಘನ ತ್ಯಾಜ್ಯ ನಿರ್ವಹಣಾ ವಿಲೇವಾರಿಗೆ ಗುರುತಿಸಲಾಗಿದೆ. ಇದರಲ್ಲಿ ೧೦ಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮೂರು ಗ್ರಾಮಗಳಲ್ಲಿ ಈಗಾಗಲೇ ಘನ ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ಕಾರ್ಯ ಸಾಗಿದೆ. ಕಳೆದ ಜೂನ್ ೧೧ ರಿಂದ ಸ್ವಚ್ಛ ಮೇವ ಜಯತೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅಭಿಯಾನದ ಅಂಗವಾಗಿ ಘನತ್ಯಾಜ್ಯ ವಸ್ತುಗಳ ವೈಜ್ಞಾನಿಕ ನಿರ್ವಹಣೆ, ಸ್ವಚ್ಛತೆ ಮತ್ತು ಶೌಚಾಲಯ ವಿಷಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದರು.

ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಮಾತನಾಡಿ ನಗರದಲ್ಲಿ ಕಸ ವಿಲೇವಾರಿ ಮತ್ತು ಪ್ಲಾಸ್ಟಿಕ್ ಮುಕ್ತ ಕಲಬುರಗಿ ನಗರವನ್ನಾಗಿಸಲು ಈಗಾಗಲೇ ಅರಿವು ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೂ ಅಭಿಯಾನ ನಡೆಸಿ ಹಲವು ಉತ್ಪಾದಕ ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಿದಲ್ಲದೆ ಜಪ್ತಿ ಸಹ ಮಾಡಲಾಗಿದೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಿಗಿರಿ ಅವರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ, ಕಸ ಸಂಗ್ರಹಣೆ ಮತ್ತು ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಸವಿಸ್ತಾರವಾಗಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಎಸ್.ಇ.ಓ ಡಾ.ಎ.ರಮೇಶ್, ರಾಜ್ಯ ಮಟ್ಟದ ಸಮಿತಿಯ ನೊಡಲ್ ಅಧಿಕಾರಿ ನಾಗೇಶ್ ಹಂಚೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಡಾ.ಗೋಪಾಲಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣಪ್ಪ, ಜಿಲ್ಲಾ ಆರೋಗ್ಯ ಮತ್ರು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಾಧವರಾವ ಕೆ.ಪಾಟೀಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗೋಮತಿ ರಾಘವೇಂದ್ರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ವಿವೇಕ ದೊರೈ ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here