ಚಿಟಗುಪ್ಪ: ಒಬ್ಬ ವ್ಯಕ್ತಿ ನಮಗೆ ಆದರ್ಶ ಎಂದೆನಿಸಿದಾಗ ನಾವು ಕೇವಲ ಅವರ ಅಭಿಮಾನಿಗಳಾಗಿರದೇ. ಆ ಮಹಾನ್ ವ್ಯಕ್ತಿಯ ಕಾರ್ಯವನ್ನು ಅಧ್ಯಯನ ಮಾಡಿ, ಅವರ ವೈಚಾರಿಕ ನೆಲೆಗಟ್ಟಿನ ಮೌಲ್ಯಗಳನ್ನು ಅರಿತುಕೊಂಡು, ಇನ್ನೊಬ್ಬರಿಗೆ ಮಾದರಿಯಾಗುವ ಕೆಲಸ ಮಾಡಿದಾಗ ಮಾತ್ರ ಒಳ್ಳೆಯರಾಗುತ್ತೇವೆ ಎಂದು ಸಾಹಿತಿ, ಪತ್ರಕರ್ತ, ಅಂಕಣಕಾರ, ಜಾನಪದ ಪರಿಷತ್ತಿನ ಅಧ್ಯಕ್ಷರಾದ ಸಂಗಮೇಶ ಎನ್ ಜವಾದಿ ಯವರು ಹೇಳಿದರು.
ನಗರದ ಕನ್ಯಾ ಪ್ರಾಥಮಿಕ ಶಾಲಾ ಆವರಣದಲ್ಲಿ ಜಾನಪದ ಪರಿಷತ್ತು ಚಿಟಗುಪ್ಪ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.
ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ. ಅದೇ ರೀತಿ ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಸಾರಿದ್ದಾರೆ.
ಪ್ರಯುಕ್ತ ಅವರ ಜನ್ಮದಿನ ಈ ಸುಸಂದರ್ಭದಲ್ಲಿ ಅವರನ್ನು ಸ್ಮರಿಸಿ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವ ಕೆಲಸ ನಾವೆಲ್ಲರೂ ಸೇರಿ ಮಾಡೋಣ. ಈ ಮೂಲಕ ವಾಲ್ಮೀಕಿ ಎಂಬ ಶ್ರೇಷ್ಠತೆಗೆ, ಮಹಾನ್ ಶಕ್ತಿಗೆ, ದಿವ್ಯ ಭಾರತೀಯ ಪರಂಪರೆಗೆ ಭಕ್ತಿಯಿಂದ ವಂದಿಸೋಣ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ ಜಮಾದಾರ್ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸತ್ಯನಾರಾಯಣ ಮಾಳಾ,ಆದಿತ್ಯ ಲಾತೂರೆ, ಶೌರ್ಯ ಜವಾದಿ, ಬಸವರಾಜ ಪಂಗರಗಿ, ರಾಕೇಶ ಗುಡ್ಡಾ, ಚನ್ನವೀರ ಲಾತೂರೆ, ಶ್ರಾವ್ಯ ಜವಾದಿ, ರವಿ ಲಿಂಗಣ್ಣಿ, ಬಸವರಾಜ ಕಲ್ಲೂರ, ಅರವಿಂದ ಪಂಚಾಳ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.