ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ, ಜಿಲ್ಲಾ ಪಂಚಾಯತ್, ಕಲಬುರಗಿ ಮತ್ತು “ಸಂಜೀವಿನಿ”-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿಯರು) “ಪರಿಸರ ಕೃಷಿ ವಿಧಾನಗಳು” ಕುರಿತು ಜಿಲ್ಲೆಯ ವಿವಿಧ ತಾಲೂಕಿನ 30 ಕೃಷಿ ಸಖಿಯರ ತರಬೇತಿ ಕಾರ್ಯಕ್ರಮಕ್ಕೆ ಚಾಲನಾ ನೀಡಲಾಯಿತು.
ಸಮಾರಂಭವನ್ನು ಉದ್ಘಾಟಿಸಿದ ಜಗದೇವ ಬಿ, ಯೋಜನಾ ನಿರ್ದೇಶಕರು, ಡಿಆರ್ಡಿಎ, ಜಿಲ್ಲಾ ಪಂಚಾಯತ್, ಕಲಬುರಗಿ ರವರು ಕೃಷಿ ಸಖಿಯರು ತರಬೇತಿಯಲ್ಲಿ ಪಡೆದ ಜ್ಞಾನವನ್ನು ಹಾಗೂ ಕೃಷಿ ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕೆಂದರು. ಮುಂದುವರೆದು, ರೈತರ ಬಡತನ ನಿರ್ಮೂಲನೆ ಮಾಡಲು ಕೃಷಿಯಲ್ಲಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರೇರಿಸಬೇಕೆಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಡಾ. ಎಮ್. ಎಮ್. ಧನೋಜಿ, ಡೀನ್(ಕೃಷಿ), ಕೃಷಿ ಮಹಾವಿದ್ಯಾಲಯ, ಕಲಬುರಗಿರವರು ಭಾರತ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು ಬಿಡುಗಡೆ ಮಾಡಿದ ನೂತನ ತಾಂತ್ರಿಕತೆಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದರು.
ಈ ನಿಟ್ಟಿನಲ್ಲಿ ಕೃಷಿ ಸಖಿಯರು ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕೆಂದರು. ಡಾ. ಬಿ. ಎಮ್. ದೊಡಮನಿ, ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕಲಬುರಗಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ನಂತರ ಪ್ರಗತಿಪರ ಕೃಷಿಕರಾದ ರೇವಪ್ಪಾ ಬಿರಾದಾರ ಮತ್ತು ಕಾಶಿನಾಥ ಚೆಂಗಟಿ ರವರು ತಮ್ಮ ಕೃಷಿ ಅನುಭವನ್ನು ಹಂಚಿಕೊಂಡರು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಣ್ಣು ವಿಜ್ಞಾನಿ ಡಾ. ನಿವಾಸ ಬಿ.ವಿ ರವರು ಸ್ವಾಗತ ಕೋರಿದರೆ, ಸಸ್ಯಶಾಸ್ತ್ರ ವಿಜ್ಞಾನಿಯಾದ ಡಾ. ಜಹೀರ್ ಅಹೆಮದ್ ರವರು ನಿರೂಪಸಿದರು. ಬೇಸಾಯಶಾಸ್ತ್ರಜ್ಞರಾದ ಡಾ. ಯುಸೂಫ್ಅಲಿ ನಿಂಬರಗಿ ರವರು ವಂದಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯ, ಬಿ.ಗುಡಿಯ ನಾಲ್ಕನೇ ವರ್ಷದ ಪದವಿ ವಿದ್ಯಾರ್ಥಿಗಳು, ನಾಗರಾಜ್, ಲೋಹಿತ್ ಹಾಗೂ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.