ಡಿ.24ರಿಂದ ವೀರಶೈವ-ಲಿಂಗಾಯತ ಮಹಾಸಭಾ 23ನೇ ಮಹಾ ಅಧಿವೇಶನ

0
9
  • ಮೂರು ದಿನಗಳ ಅಧಿವೇಶನದಲ್ಲಿ ಪ್ರತ್ಯೇಕ ಧರ್ಮ ರಚನೆಗೆ ಹಕ್ಕೊತ್ತಾಯ

ಕಲಬುರಗಿ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ 23ನೇ ಮಹಾ ಅಧಿವೇಶನ ಡಿಸೆಂಬರ್ 24, 25 ಹಾಗೂ 26ರಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದರು.

ನಗರದ ಸಾರ್ವಜನಿಕ ಉದ್ಯಾನ ಸಮೀಪದ ಮಹಾಸಭಾ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷತೆ ವಹಿಸಲಿರುವ ಅಧಿವೇಶನವನ್ನು ಡಿ.24ರಂದು ಬೆಳಗ್ಗೆ 11.30ಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ಸಹ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

Contact Your\'s Advertisement; 9902492681

ಮಹಾಸಭಾ ದಾವಣಗೆರೆ ಜಿಲ್ಲಾ ಘಟಕ ಈ ಬಾರಿಯ ಅಧಿವೇಶನದ ಆತಿಥ್ಯ ವಹಿಸಿಕೊಳ್ಳುತ್ತಿದ್ದು, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲಾ ಘಟಕಗಳು ಅಧಿವೇಶನದ ಎಲ್ಲ ಕಾರ್ಯಗಳಲ್ಲಿ ಸಹಕಾರ ನೀಡುತ್ತಿವೆ. ಅಧಿವೇಶನದ ಪ್ರಯುಕ್ತ ಮೂರು ದಿನಗಳ ಕಾಲ ವಿವಿಧ ವಿಷಯಗಳ ಮೇಲೆ ಚರ್ಚೆ ನಡೆಯಲಿದ್ದು, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಸಮಸ್ಯೆಗಳು, ಯುವ ಸಮೂಹದ ಮುಂದಿರುವ ಸಮಸ್ಯೆ ಮತ್ತು ಸವಾಲುಗಳು, ಧಾರ್ಮಿಕ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ ಎಂದರು.

ಇದೇ ಮೊದಲ ಬಾರಿ ಅಧಿವೇಶನದಲ್ಲಿ ನೌಕರರು ಹಾಗೂ ಮಾಧ್ಯಮ ಕ್ಷೇತ್ರದ ಕುರಿತು ಸಹ ಚರ್ಚೆ ನಡೆಸಲಾಗುತ್ತಿದೆ ಎಂದು ರೇಣುಕಾ ಪ್ರಸನ್ನ ಹೇಳಿದರು.

ನೋಂದಣಿಗೆ ಆಹ್ವಾನ: ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರತಿಯೊಬ್ಬರೂ ರೂ.500 ಶುಲ್ಕದೊಂದಿಗೆ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಇದರಿಂದಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳಿಗೆ ಉಚಿತವಾಗಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗಲಿದೆ ಎಂದು ವಿವರಿಸಿದರು.

ಅಧಿವೇಶನದಲ್ಲಿ ಯಾವೆಲ್ಲಾ ಅಂಶಗಳ ಕುರಿತು ಚರ್ಚಿಸಬೇಕು ಎಂಬುದರ ಕುರಿತು ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಮಹನೀಯರಿಂದ ಸಲಹೆಗಳನ್ನು ಆಹ್ವಾನಿಸಲಾಗುತ್ತಿದೆ. ಆಸಕ್ತರು ಡಿಸೆಂಬರ್ 15ರೊಳಗೆ ಈ ನಿಟ್ಟಿನಲ್ಲಿ ತಮ್ಮ ಸಲಹೆಗಳನ್ನು ನೀಡಬಹುದಾಗಿದೆ ಎಂದು ರೇಣುಕಾ ಪ್ರಸನ್ನ ಮನವಿ ಮಾಡಿದರು.

ಸಿದ್ದುಗೌಡ ಅಫಜಲಪುರ, ಸೋಮಶೇಖರ ಹಿರೇಮಠ, ಉದಯ ಪಾಟೀಲ್, ಭೀಮಾಶಂಕರ ಮಿಟೆಕಾರ್, ಎಂ.ಎಸ್.ಪಾಟೀಲ್ ನರಿಬೋಳ, ಮಹಾಸಭಾ ಯುವ ಘಟಕದ ಅಧ್ಯಕ್ಷ ಶಂಭುಲಿಂಗ ಬಳಬಟ್ಟಿ, ಮಹಾಸಭಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಜ್ಯೋತಿ ಮರಗೋಳ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಸ್ವತಂತ್ರ ಧರ್ಮದ ವಿಚಾರವೇ ಪ್ರಧಾನ:  ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ರಚನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವುದು ಈ ಬಾರಿಯ ಅಧಿವೇಶನದ ಪ್ರಮುಖ ಅಂಶ ಆಗಿರಲಿದೆ. ಈ ನಿಟ್ಟಿನಲ್ಲಿ ಅಧಿವೇಶನದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದರು.

ಇದರ ಜೊತೆಗೆ, ಕೇಂದ್ರ ಸರಕಾರದ ಒಬಿಸಿ ಪಟ್ಟಿಯಲ್ಲಿ ವೀರಶೈವ-ಲಿಂಗಾಯತ ಸಮುದಾಯಗಳನ್ನು ಸೇರ್ಪಡೆ ಮಾಡಬೇಕೆಂದು ಈಗಾಗಲೇ ಮನವಿ ಸಲ್ಲಿಸಲಾಗಿದೆ.

ಡಿಸೆಂಬರ್ 24ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾಧಿವೇಶನದಲ್ಲಿ ಸುಮಾರು ಎರಡು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. -ರೇಣುಕಾ ಪ್ರಸನ್ನ, ರಾಷ್ಟ್ರೀಯ ಕಾರ್ಯದರ್ಶಿ, ಅ.ಭಾ.ವೀ-ಲಿಂ. ಮಹಾಸಭಾ

ನೋಂದಣಿಗೆ ಹೀಗೆ ಮಾಡಿ:  ದಾವಣಗೆರೆ ನಗರದಲ್ಲಿ ನಡೆಯಲಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಬಯಸುವವರು ಖುದ್ದಾಗಿ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ. ನೇರವಾಗಿ ಭೇಟಿ ನೀಡಲು ಸಾಧ್ಯವಾಗದೆ ಹೋದಲ್ಲಿ http://apply.veerashaivamahasabha.in/ ಲಿಂಕ್ ಬಳಸಿ ಆನ್‍ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here