ಕೂಡ್ಲಿಗಿ: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯರವರು ಮಕ್ಕಳಿಗೆ ಸೂಕ್ತ ಪೋಷಕಾಂಶಗಳು ದೊರಕಲಿ ಎಂಬ ಸದುದ್ದೇಶದಿಂದ ಜಾರಿಗೆ ತಂದಿದ್ದ ಕ್ಷೀರಭಾಗ್ಯ ಯೋಜನೆ ಎರಡು ಮೂರು ತಿಂಗಳಿಂದ ಸ್ಥಗಿತಗೊಂಡಿದ್ದು ತಕ್ಷಣವೇ ಶಾಲಾ ಮಕ್ಕಳಿಗೆ ಹಾಲು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ ಆಗ್ರಹಿಸಿದರು.
ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಪ್ರತಿ ತಿಂಗಳು 500 ಟನ್ ಹಾಲಿನ ಪೌಡರ್ ಬೇಡಿಕೆ ಇದ್ದು ಬಿಜೆಪಿ ಸರ್ಕಾರ ಇದನ್ನು ನಿರ್ಲಕ್ಷ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಸರಿಯಾದ ಸಮಯಕ್ಕೆ ನೀಡದೇ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಬಗ್ಗೆ ಬಿಜೆಪಿ ಸರ್ಕಾರ ನಿರ್ಲಕ್ಷೆ ತೋರುವ ಜೊತೆಗೆ ಹಾಲಿನ ಪೌಡರ್ ಒದಗಿಸಿದ ಹಾಲು ಒಕ್ಕೂಟಗಳ ಕೋಟ್ಯಾಂತರ ಬಿಲ್ ಬಾಕಿ ಉಳಿಸಿಕೊಂಡಿದ್ದು, ತಕ್ಷಣವೇ ಅದನ್ನು ಪಾವತಿಸಿ ಬೇರೆ ರಾಜ್ಯಗಳಿಂದ ಹಾಲಿನ ಪೌಡರ್ ಖರೀದಿಸಿ ಶಾಲಾ ಮಕ್ಕಳಿಗೆ ವಿತರಿಸಲು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೂಡ್ಲಿಗಿ ಪ.ಪಂ ಸದಸ್ಯರಾದ ಕಾವಲ್ಲಿ ಶಿವಪ್ಪ ನಾಯಕ, ಸೈಯದ್ ಶುಕೂರ್, ಮುಖಂಡ ಮಗಿಮಾವಿನಹಳ್ಳಿ ವಿರುಪಾಕ್ಷ ಉಪಸ್ಥಿತರಿದ್ದರು.