- ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳ; ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅನುವು; ಕೆ ನೀಲಾ
ಕಲಬುರಗಿ: ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ – 1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023ನ್ನು ರಾಜ್ಯ ಬಿಜೆಪಿ ಸರ್ಕಾರ ವಿಧಾನ ಸಭೆಯಲ್ಲಿ ಮಂಡಿಸಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿಯಾಗಿದ್ದು, ಚುನಾವಣೆ ಹೊಸ್ತಿಲಲ್ಲಿ ಬಂಡವಾಳಗಾರರನ್ನು ಓಲೈಸುವ ಕ್ರಮವಾಗಿದೆ. ಈ ತಿದ್ದುಪಡಿ ವಿದೇಯಕ ಕಾರ್ಮಿಕರ ವಿರೋಧ ಮತ್ತು ಬಂಡವಾಳ ಶಾಕಿಗಳ ಪರವಾಗಿದ್ದು, ಕೂಡಲೇ ಈ ವಿಧೇಯಕವನ್ನು ವಾಪಸ್ಸು ಪಡೆಯಬೇಕೆಂದು ರಾಜ್ಯ ಸರ್ಕಾರಕ್ಕೆ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಆಗ್ರಹಿಸಿದ್ದಾರೆ.
ಪ್ರಸ್ತುತ ಕಾಯ್ದೆಯಲ್ಲಿ ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕು. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಿರುವುದು ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವುದು ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಧೋರಣೆಯಾಗಿದೆ ಎಂದು ಕೀಡಿಕಾರಿದ್ದಾರೆ.
ಪ್ರಸ್ತುತ ಉದ್ಯೋಗದ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಹೆಚ್ಚಾಗಿದೆ. ಈ ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆಗಳ ಮಾಲಿಕರಿಗೆ 6 ದಿನಗಳಲ್ಲಿ ಉತ್ಪಾದನೆ ಆಗುತ್ತಿದ್ದು 4 ದಿನಗಳಲ್ಲೇ ಉತ್ಪಾದನೆ ಕಾರ್ಮಿಕರ ಶ್ರಮದ ಶೋಷಣೆಯಿಂದ ಸಿಗಲಿದೆ. ಮೂರು ಶಿಫ್ಟ್ ಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ಅವಕಾಶ ಕಲ್ಪಸುತ್ತದೆ. ಚಾರಿತ್ರಿಕ 8 ಗಂಟೆ ಕೆಲಸ 8 ಗಂಟೆ ವಿರಾಮ ಮತ್ತು 8 ಗಂಟೆ ಮನೋರಂಜನೆ ಎಂಬ ಜೀವಪರ ತಾತ್ವಿಕ ನೆಲೆಯನ್ನು ಕಳಚಿ ಹಾಕಿ ಬಂಡವಾಳಕ್ಕೆ ಲಾಭ ಮಾಡಿಕೊಡುವ ನವ ಉದಾರವಾದಿ ಆಥಿ೯ಕ ನೀತಿಯ ಜಾರಿಯ ನಿಟ್ಟಿನಲ್ಲಿ ಬಿಜೆಪಿ ಸಕಾ೯ರವು ಈ ತಿದ್ದುಪಡಿಗೆ ಕ್ರಮ ವಹಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ದುಡಿಯುವ ಮಹಿಳೆಯರ ಸುರಕ್ಷತೆ, ಕೆಲಸದ ಭದ್ರತೆ, ಸಾರಿಗೆ, ಸೇವಾ ಸೌಲಭ್ಯಗಳಿಂದ ಮಹಿಳಾ ಕಾರ್ಮಿಕರು ವಂಚಿತರಾಗಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಕಿರುಕುಳ ಹೆಚ್ಚಾಗಿದೆ. ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದ್ದು, ಕೆಲಸದ ಅಭದ್ರತೆಯಿಂದಾಗಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೀಗಿರುವಾಗ ಮಹಿಳಾ ಕಾರ್ಮಿಕರನ್ನು ರಾತ್ರಿಪಾಳಿಯಲ್ಲಿ ದುಡಿಮೆ ಮಾಡಿಕೊಳ್ಳಲು ಕಾರ್ಖಾನೆ ಮಾಲಿಕರಿಗೆ ಅನುವುಗೊಳಿಸಿ ತಿದ್ದುಪಡಿ ಮಾಡಿರುವುದು ಮಹಿಳಾ ಕಾರ್ಮಿಕರನ್ನು ದುಡಿಮೆಯಿಂದ ಹೊರಗಿಡುವ ಹುನ್ನಾರವಾಗಿದೆ. ರಾತ್ರಿ ಪಾಳಿ ಕೆಲಸದ ಆಯ್ಕೆಯ ಹಕ್ಕು ಮಹಿಳೆಯರದ್ದಾಗಿದೆ. ರಾತ್ರಿ ಪಾಳಿ ಆಯ್ಕೆ ಮಾಡಿಕೊಂಡಲ್ಲಿ ಅವರ ಸುರಕ್ಷತೆಯ ಹೊಣೆಯು ಸರಕಾರ/ಮಾಲಿಕರದ್ದಾಗಿದೆ.
ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ 2020 ರಲ್ಲಿ ಕಾರ್ಮಿಕ ವಿರೋಧಿಯಾಗಿ ಈ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕ ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಿದರೂ ಕಾರ್ಮಿಕರ ತೀವ್ರ ವಿರೋಧದಿಂದಾಗಿ ವಿಧಾನ ಪರಿಷತ್ತುನಲ್ಲಿ ಸೋಲಾಗಿತ್ತು. ಈಗ ಬಿಜೆಪಿ ಸರ್ಕಾರ ಚುನಾವಣೆ ಹೊಸ್ತಿಯಲ್ಲಿ ಬಂಡವಾಳಗಾರರ ಲಾಭವನ್ನು ಹೆಚ್ಚಿಸಲು ಈ ತಿದ್ದುಪಡಿ ವಿಧೇಯಕವನ್ನು ಶಾಸನ ಸಭೆಯಲ್ಲಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿ ನಡೆಯಾಗಿದೆ ಎಂದು ದುರಿದ್ದಾರೆ.
ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ ನಿಗದಿ ಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದ್ದಾರೆ.